ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನುಸುಳುಕೋರರನ್ನು ತಡೆಯುವ ವೇಳೆ ಭದ್ರತಾ ಪಡೆಗಳೊಂದಿಗೆ ಆದ ಗುಂಡಿನ ಚಕಮಕಿಯಲ್ಲಿ ಏಳು ವರ್ಷದ ಬಾಲಕಿ ಗಾಯಗೊಂಡಿದ್ದಾಳೆ.
ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿರಾನಗರ ವಲಯದ ಅಂತರರಾಷ್ಟ್ರೀಯ ಗಡಿಯ ಬಳಿಯ ಸನ್ಯಾಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಜಮ್ಮು ಇತ್ತೀಚೆಗೆ ಭಯೋತ್ಪಾದಕರ ಸರಣಿ ಒಳನುಸುಳುವಿಕೆಗೆ ಸಾಕ್ಷಿಯಾಗುತ್ತಿದೆ. ಮಾ.17 ರಂದು, ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದು, ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತನಾಗಿದ್ದ.
ಇತ್ತೀಚೆಗೆ ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮೂವರು ಅಮಾಯಕ ನಾಗರಿಕರನ್ನು ಕೊಂದಿದ್ದಾರೆ. ಅವರಲ್ಲಿ ಒಬ್ಬ 14 ವರ್ಷದ ಬಾಲಕನೂ ಸೇರಿದ್ದಾನೆ.