ಚೆನ್ನೈ: ಸ್ವಘೋಷಿತ ದೇವಮಾನವ ಕಲ್ಕಿ ಭಗವಾನ್ 800 ಕೋಟಿ ರೂ. ತೆರಿಗೆ ವಂಚನೆ ಕೇಸ್ನಲ್ಲಿ ಈಗ ಜಾರಿ ನಿರ್ದೇಶನಾಲಯ ಎಂಟ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ ಮಾತ್ರವಲ್ಲ ವಿದೇಶಗಳಲ್ಲೂ ಕಲ್ಕಿ ಭಗವಾನ್ ಅಪಾರ ಪ್ರಮಾಣದ ಆಸ್ತಿ ಗಳಿಸಿದ್ದಾರೆ. ಇತ್ತೀಚೆಗೆ ಆದಾಯ ತೆರಿಗೆ ನಡೆಸಿರುವ ದಾಳಿಯಲ್ಲಿ ಅಪಾರ ಪ್ರಮಾಣದ ನಗ-ನಾಣ್ಯ, ವಜ್ರಾಭರಣಗಳು, ವಿದೇಶಿ ಹಣ, ಆಸ್ತಿಯ ದಾಖಲೆಗಳು ಪತ್ತೆಯಾಗಿದ್ದವು.
ಕಲ್ಕಿ ಭಗವಾನ್ ಪುತ್ರ ಕೃಷ್ಣಾ ಒಡೆತನದ `ವೈಟ್ ಲೋಟಸ್’ಗಳ ಮೇಲೆ ಐಟಿ ಅಧಿಕಾರಿಗಳು ಸೋಮವಾರ ರೇಡ್ ಮಾಡಿದ್ದರು. ಹೈದರಾಬಾದ್, ಚೆನ್ನೈ, ಬೆಂಗಳೂರು, ಚಿತ್ತೂರು ಹಾಗೂ ಕುಪ್ಪಂನಲ್ಲಿರುವ `ವೈಟ್ ಲೋಟಸ್’ಗಳಲ್ಲಿ 90 ಕೆಜಿ ಚಿನ್ನ, 44 ಕೋಟಿ ರೂ. ನಗದು ಹಾಗೂ 20 ಕೋಟಿ ರೂ. ಮೌಲ್ಯದ ಅಮೆರಿಕನ್ ಡಾಲರ್ ನೋಟುಗಳು ದೊರೆತಿದ್ದವು. ಜೊತೆಗೆ ಪ್ರಮುಖ ದಾಖಲೆಗಳು ಸಿಕ್ಕಿದ್ದು, ಎಲ್ಲವನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಇದುವರೆಗೆ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದಲ್ಲಿರುವ ಕಲ್ಕಿಯ 40ಕ್ಕೂ ಹೆಚ್ಚು ಆಸ್ತಿಗಳ ಮೇಲೆ ದಾಳಿ ನಡೆದಿದೆ. ಒನ್ನೆಸ್, ವೆಲ್ನೆಸ್ ಸಮೂಹದ ಎಲ್ಲ ಕಂಪನಿಗಳನ್ನು ಜಾಲಾಡಲಾಗುತ್ತಿದೆ. ಅಘೋಷಿತ ಆಸ್ತಿ ಪತ್ರಗಳು, ವಜ್ರವೈಢೂರ್ಯ, ಅಪಾರ ಪ್ರಮಾಣದ ನೋಟಿನ ಕಂತೆಗಳು ಸೇರಿ ಬರೋಬ್ಬರಿ 800 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ಆಂಧ್ರದ ವರದಯ್ಯಪಾಳ್ಯಂನ ಆಶ್ರಮದಿಂದ ಕದ್ದು ಮುಚ್ಚಿ ಸಾಗಿಸುತ್ತಿದ್ದ 45 ಕೋಟಿ ರೂ. ನಗದನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಕಲ್ಕಿ ಭಗವಾನ್ ಯಾರು?:
ಎಲ್ಐಸಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಆಂಧ್ರಪ್ರದೇಶ ಮೂಲದ ವಿಜಯ್ಕುಮಾರ್ ನಾಯ್ಡು ಕೆಲಸಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನ ಶಾಲೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ನಂತರ ಅಲ್ಲಿಂದಲೂ ಹೊರಬಿದ್ದು ಚಿತ್ತೂರಿನಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದ. 1989ರಲ್ಲಿ ಶಿಕ್ಷಣ ಸಂಸ್ಥೆಗಳು ನಷ್ಟ ಅನುಭವಿಸಿದ ಬಳಿಕ ಕೆಲ ವರ್ಷ ಭೂಗತನಾಗಿದ್ದ ವಿಜಯ್ಕುಮಾರ್ ದಿಢೀರ್ ಸ್ವಾಮಿ ವೇಷದಲ್ಲಿ ಪ್ರತ್ಯಕ್ಷನಾಗಿ, ”ನಾನು ವಿಷ್ಣುವಿನ 10ನೇ ಅವತಾರ. ನಾನು ಕಲ್ಕಿ ಭಗವಾನ್” ಎಂದು ಘೋಷಿಸಿಕೊಂಡಿದ್ದ.
ನನ್ನ ಪತ್ನಿಯೂ ದೇವರ ಅವತಾರ ಎಂದು ಕಲ್ಕಿ ಘೋಷಿಸಿಕೊಂಡಿದ್ದ. ಕೆಲ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ದುಡ್ಡುಕೊಟ್ಟಂತೆ ಇವರ ಸಾಮಾನ್ಯ ದರ್ಶನಕ್ಕೆ ಭಕ್ತರು 5 ಸಾವಿರ ರೂ. ಮತ್ತು ವಿಶೇಷ ದರ್ಶನಕ್ಕೆ 25 ಸಾವಿರ ರೂ. ಪಾವತಿಸಬೇಕಿತ್ತು. ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹಲವು ಕಡೆ ಆಶ್ರಮ ಕಡೆ ಸ್ಥಾಪಿಸಿದ್ದ. ಈತನಿಗೆ ಅನಿವಾಸಿ ಭಾರತೀಯರು ಮತ್ತು ದೊಡ್ಡ ದೊಡ್ಡ ಉದ್ಯಮಿಗಳು ಭಕ್ತರಿದ್ದಾರೆ. ಭಕ್ತರು ಆಶ್ರಮಕ್ಕೆ ನೀಡಿದ ದೇಣಿಗೆ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ. ಭಾರೀ ತೆರಿಗೆ ವಂಚನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.