ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿಯಾಗಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೆಶನಾಲಯ ಎಫ್ಐಆರ್ ದಾಖಲಿಸಲು ಸಿದ್ಧತೆ ನಡೆಸುತ್ತಿದೆ.
ದೆಹಲಿಯ 4 ಫ್ಲಾಟ್ ಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಣದ ಮೂಲಗಳ ಬಗ್ಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಶಿವಕುಮಾರ್ ಮೇಲೆ ಕೇಸ್ ದಾಖಲಾಗುವ ಸಾಧ್ಯತೆ ಇದ್ದು, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇದನ್ನೂ ಓದಿ: ನೋಟ್ ಬ್ಯಾನ್ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಬದಲಾವಣೆ ಮಾಡಿಸಿದ್ರಂತೆ ಡಿಕೆಶಿ: ಇಡಿಯಲ್ಲಿ ದೂರು
ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದಾರೆ. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ.
ಐಟಿ ದಾಳಿಯಾದ ಬಳಿಕ ಪತ್ತೆಯಾದ ಡೈರಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಡಿಕೆ ಶಿವಕುಮಾರ್ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು. ಕೆಜಿ ಎಂಬ ಕೋಡ್ ವರ್ಡ್ ಬಳಸಿ ನಗದು ವ್ಯವಹಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನದ ಮೇರೆಗೆ ಅಧಿಕಾರಿಗಳು ಆರೋಪಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಆದರೆ ಈ ಪ್ರಶ್ನೆಗಳಿಗೆ ಆರೋಪಿಗಳಿಂದ ಸರಿಯಾದ ಉತ್ತರ ಸಿಕ್ಕಿರಲಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿತ್ತು.
ಎಫ್ಐಆರ್ ದಾಖಲಾದರೆ ಏನಾಗುತ್ತದೆ?
ಒಂದು ವೇಳೆ ಡಿಕೆಶಿ ವಿರುದ್ಧ ಎಫ್ಐಆರ್ ಆದರೆ ಜಾರಿ ನಿರ್ದೇಶನಾಲಯ ಅವರ ಬಂಧನಕ್ಕೆ ಮುಂದಾಗಬಹುದು. ಹೆಚ್ಚಿನ ತನಿಖೆಗಾಗಿ ಡಿಕೆಶಿ ಬಂಧನ ಅನಿವಾರ್ಯ ಎಂದು ಜಾರಿ ನಿರ್ದೇಶನಾಲಯ ವಾದಿಸಬಹುದು. ಎಫ್ಐಆರ್ ದಾಖಲಾದರೆ ಅನಿವಾರ್ಯವಾಗಿ ಡಿಕೆಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಅಷ್ಟೇ ಅಲ್ಲದೇ ಡಿಕೆಶಿ ಹೆಸರಲ್ಲಿರುವ ಆಸ್ತಿಯೆಲ್ಲವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಡಿಕೆಶಿ ಜೊತೆ ಅವರ ಆಪ್ತರ ಅಧಿಕಾರ, ಆಸ್ತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv