– ಅಭಿಮನ್ಯು ಈ ಬಾರಿಯೂ ದಸರಾದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲು ಮನವಿ ಸಲ್ಲಿಕೆ
ಬೆಂಗಳೂರು: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು (Abhimanyu Elephant) ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwara Khandre) ಮನವಿ ಮಾಡಿದ್ದಾರೆ.
ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಅಭಿಮನ್ಯುವಿಗೆ ನಾಡಿನಾದ್ಯಂತ ದೊಡ್ಡ ಅಭಿಮಾನಿ ಬಳಗವೇ ಇದೆ. ಏಕಾಏಕಿ ಅಭಿಮನ್ಯುವನ್ನು ದಸರಾ ಮಹೋತ್ಸವದಿಂದ ಹೊರಗಿಡುವ ಬದಲು ನಿಶಾನೆ ಆನೆಯಾಗಿ ಬಳಸಿ, ಗೌರವಪೂರ್ವಕವಾಗಿ ಹಾಗೂ ರಾಜೋಚಿತವಾಗಿ ಬೀಳ್ಕೊಡುಗೆ ನೀಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯುವಿಗೆ ನಿವೃತ್ತಿ – ಈ ಬಾರಿ ದಸರಾ ಗಜಪಡೆಗೆ ಹೊಸ ಕ್ಯಾಪ್ಟನ್
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯೇ ವಿಜಯದಶಮಿ ಜಂಬೂಸವಾರಿ. ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಬಗ್ಗೆ ರಾಜ್ಯದ ಜನತೆಗೆ ಅವಿನಾಭಾವ ಸಂಬಂಧವಿದೆ. ಚಿನ್ನದಂಬಾರಿ ಹೊರುವ ಆನೆಗಳ ಬಗ್ಗೆಯಂತೂ ವಿಶೇಷ ಪ್ರೀತಿ ಇದೆ. ಈ ಬಾರಿ ದಸರಾ ಮಹೋತ್ಸವದಿಂದ ಕ್ಯಾಪ್ಟನ್ ಅಭಿಮನ್ಯುವನ್ನು ಕೈಬಿಟ್ಟಿರುವುದು ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಾಗರಹೊಳೆಯ ಮತ್ತಿಗೋಡು ಶಿಬಿರದ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವುದಲ್ಲದೆ, 6 ಬಾರಿ ಅಂಬಾರಿ ಹೊತ್ತು ರಾಜ್ಯದ ಜನರ ಹೃದಯದಲ್ಲಿ ನೆಲೆಸಿದ್ದಾನೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಇದನ್ನೂ ಓದಿ: ಬೇಟೆಗಾರರ ಎನ್ಕೌಂಟರ್ ಕೇಸ್ | ಸಂಧಾನ ವಿಫಲ – ಮರಣೋತ್ತರ ಪರೀಕ್ಷೆಗೆ ಸಹಿ ಹಾಕದ ಕುಟುಂಬಸ್ಥರು
1968ರಲ್ಲಿ ಕಾಕನಕೋಟೆ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದ. 60 ವರ್ಷ ತುಂಬಿದ ಬಳಿಕವೂ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ. ಅದೇ ರೀತಿ ಬಲರಾಮ ಕೂಡ ಪಾಲ್ಗೊಂಡಿದ್ದ. ಈ ಗೌರವವನ್ನು ಅಭಿಮನ್ಯುವಿಗೂ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡುವಂತೆ ಕೋರಿದ್ದಾರೆ.
