ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ. ಅಲ್ಲದೇ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಲಿ. ನಾವು ಸರ್ಕಾರ ರಚಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ವೈ, ನಾವು ಸರ್ಕಾರ ರಚಿಸಲು ಸಿದ್ಧರಾಗಿದ್ದು, ಯಾವುದೇ ಕಾರಣಕ್ಕೆ ಮಧ್ಯಂತರ ಚುನಾವಣೆ ಬೇಡ. ಜನರು ನೀಡಿರುವ ಜನಾದೇಶಕ್ಕೆ ವಿರೋಧವಾಗಿ ನಡೆಯುವುದು ಸೂಕ್ತವಲ್ಲ. ನಾವು 105 ಶಾಸಕರನ್ನು ಹೊಂದಿದ್ದು, ಸರ್ಕಾರ ರಚನೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧವಾಗಿಲ್ಲ ಎಂದರು.
ಈ ಬಗ್ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದು, 37 ಶಾಸಕರನ್ನು ಇಟ್ಟುಕೊಂಡು ಸರ್ಕಾರ ರಚನೆ ಮಾಡಿ ಈಗ ಚುನಾವಣೆ ಹೋಗೋಣ ಎನ್ನುತ್ತಾರೆ. 11 ತಿಂಗಳಿನಿಂದ ಅಭಿವೃದ್ಧಿ ಕಾರ್ಯಗಳಲ್ಲಿ ಹಿನ್ನಡೆಯಾಗಿದ್ದು, ಅವರ ತೀಟೆ ತಿರಿಸಿಕೊಳ್ಳಲು ಮತ್ತೊಂದು ಚುನಾವಣೆ ಬೇಕಾ ಎಂದು ಪ್ರಶ್ನಿಸಿದರು. ಅಲ್ಲದೇ ಇಂದು ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಎಂದು ತೆರಳಿದ್ದರೆ, ಆದರೆ ಇತ್ತ ಅವರ ತಂದೆ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾರೆ. ಆದರೆ ಈ ಮಾತಿಗೆ ಕಾಂಗ್ರೆಸ್, ಸಿದ್ದರಾಮಯ್ಯ ಅವರ ಒಪ್ಪಿಗೆ ಅಗತ್ಯವಿದೆ. ಆದರೆ ಈ ರೀತಿ ಹೇಳಿಕೆ ನೀಡುವುದರಿಂದ ಅಧಿಕಾರಿಗಳಲ್ಲಿ ಗೊಂದಲ ಉಂಟಾಗುತ್ತದೆ ಎಂದರು.
ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರ ಆಪರೇಷನ್ ಕಮಲ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ ಅವರು, ಅವರ ಬಳಿ 135 ರಿಂದ 136 ಮಂದಿ ಶಾಸಕರಿದ್ದಾರೆ. ಆದರೆ ಅವರಲ್ಲಿ ಸುಮಾರು 20 ಜನ ಅತೃಪ್ತ ಶಾಸಕರಿದ್ದಾರೆ. ಅವರಾಗಿಯೇ ಸರ್ಕಾರವನ್ನು ಬಿಟ್ಟು ಹೋದರೆ ನಾವು ಜವಾಬ್ದಾರಿ ಅಲ್ಲ. ಈ ಹಿಂದೆ ಸ್ಪಷ್ಟಪಡಿಸಿರುವಂತೆ ಯಾವುದೇ ಶಾಸಕರನ್ನು ಸಂಪರ್ಕ ಮಾಡಿಲ್ಲ. ಅವರಾಗಿಯೇ ಸರ್ಕಾರ ಬಿಟ್ಟು ಬಂದರೆ ಮಾತ್ರ ವಿಚಾರಣೆ ಮಾಡುತ್ತೇವೆ. ಅಲ್ಲಿಯವರೆಗೂ ನಾವು ಕಾದು ನೋಡುತ್ತೇವೆ ಎಂದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]