ಚಿಕ್ಕಮಗಳೂರು: ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜೆಡಿಎಸ್ ರಾಜ್ಯಾದ್ಯಕ್ಷ ಕುಮಾರಸ್ವಾಮಿ ಅವರು ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆ. ನಂತರ ಚಿಕ್ಕಮಗಳೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
2018ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದು, ಹಾರ್ಟ್ ಆಪರೇಷನ್ ಬಳಿಕ ವಿಶ್ರಾಂತಿ ಮುಗಿಸಿ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ರಾಜ್ಯ ಪ್ರವಾಸಕ್ಕೆ ರೆಡಿಯಾಗಿದ್ದಾರೆ. ನವೆಂಬರ್ 7ರಂದು ಕರ್ನಾಟಕ ವಿಕಾಸ ವಾಹಿನಿ ಯಾತ್ರೆಗೆ ಚಾಲನೆ ನೀಡಲಿರೋ ಕುಮಾರಸ್ವಾಮಿ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮುಗುಳುವಳ್ಳಿಯ ದಲಿತ ಧರ್ಮಪಾಲ್ ಎಂಬವರ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕರ್ನಾಟಕ ವಿಕಾಸ ವಾಹಿನಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಹಾಸನ ಮಾರ್ಗವಾಗಿ ಚಿಕ್ಕಮಗಳೂರಿಗೆ ಆಗಮಿಸಿ, ನಗರದ ಆಜಾದ್ ವೃತ್ತದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನ ಪ್ರಚಾರಕ್ಕೆ ಬಳಸಲಿರುವ ಕುಮಾರಸ್ವಾಮಿ ಚಿಕ್ಕಮಗಳೂರಿಂದ ಶಿವಮೊಗ್ಗ ತೆರಳಲಿದ್ದಾರೆ.
ಕಾಫಿನಾಡು ಚಿಕ್ಕಮಗಳೂರು ಮಾಜಿ ಪ್ರಧಾನಿ ಇಂದಿರಾಗಾಂಧಿಗೆ ರಾಜಕೀಯ ಮರುಜನ್ಮ ನೀಡಿದ ಹೆಗ್ಗಳಿಕೆ ಹೊಂದಿದ್ದು, ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಅಂತ ಹೊರಟಿರುವ ಕುಮಾರಸ್ವಾಮಿಗೆ ಆಸರೆಯಾಗುತ್ತಾ ಕಾದು ನೋಡಬೇಕಿದೆ.