ಶ್ರೀನಗರ: ಕಳೆದ ಕೆಲವು ದಿನಗಳಿಂದ ಕಾಶ್ಮೀರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಶ್ಮೀರದಲ್ಲಿ ಏನಾಗ್ತಿದೆ ಎಂಬುದರ ಬಗ್ಗೆ ಯಾರು ಸಹ ಮಾಹಿತಿ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆತಂಕ ವ್ಯಕ್ತಪಡಿಸಿದ್ದಾರೆ.
ಇಂದು ಖಾಸಗಿ ಹೋಟೆಲ್ ನಲ್ಲಿ ರಾಜಕೀಯ ನಾಯಕರ ಸಭೆಯನ್ನು ಕರೆಯಲಾಗಿತ್ತು. ಆದ್ರೆ ಪೊಲೀಸರು ನಮ್ಮ ಹೋಟೆಲ್ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಸಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಸಹ ಸೋಮವಾರ ದಿಢೀರ್ ಎಂದು ಸಂಪುಟ ಸಭೆಯನ್ನು ಕರೆದಿದ್ದಾರೆ. ಸಾಮಾನ್ಯವಾಗಿ ಮೋದಿ ಅವರ ಮಂತ್ರಿಮಂಡಲದ ಸಭೆ ಬುಧವಾರ ನಡೆಯುತ್ತದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಕೆಲ ಭಾಗಗಳಿಗೆ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಕಳೆದ ಕೆಲ ದಿನಗಳಿಂದ ಗಡಿ ಪ್ರದೇಶದಲ್ಲಿ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಇತ್ತ ಪರಿಚ್ಛೇಧ 370ರ ಬಗ್ಗೆ ಕೆಲ ಸುದ್ದಿಗಳು ಹರಿದಾಡುತ್ತಿವೆ. ಜಮ್ಮು, ಕಾಶ್ಮೀರ ಮತ್ತು ಲಡಾಕ್ ಎಂದು ರಾಜ್ಯವನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಜನತೆ ಭಯಭೀತರಾಗಿದ್ದಾರೆ ಎಂದು ಮಾಜಿ ಸಿಎಂ ತಿಳಿಸಿದರು.
ಪರಿಚ್ಛೇಧ 370 ಅಥವಾ 35ಎ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾದ್ರೆ ಪರಿಣಾಮ ವ್ಯತಿರಿಕ್ತವಾಗಲಿದೆ ಎಂಬುದನ್ನು ದೇಶದ ಜನತೆಗೆ ತಿಳಿಸಲು ಇಚ್ಛಿಸುತ್ತೇನೆ. ಈ ಸಂಬಂಧ ಯಾವುದೇ ಮಸೂದೆಯನ್ನು ಅಂಗೀಕರಿಸಕೂಡದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇಂದು ಹೋಟೆಲ್ ನಲ್ಲಿ ಕರೆಯಲಾಗಿದ್ದ ಸಭೆ ಸಂಜೆ 6 ಗಂಟೆಗೆ ನನ್ನ ನಿವಾಸದಲ್ಲಿ ನಡೆಯಲಿದೆ ಎಂದರು.
ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಜನರು ಪೆಟ್ರೋಲ್ ಬಂಕ್, ಎಟಿಎಂ ಮುಂದೆ ಸಾಲಿನಲ್ಲಿ ನಿಂತಿದ್ದಾರೆ. ಇತ್ತ ಜನರು ದಿನನಿತ್ಯದ ಅವಶ್ಯಕ ಸಾಮಾಗ್ರಿಗಳನ್ನು ಹೆಚ್ಚು ಹೆಚ್ಚು ಖರೀದಿಸುತ್ತಿದ್ದಾರೆ. ಉತ್ತರ ಕಾಶ್ಮೀರದ ಹಲವು ಭಾಗಗಳಲ್ಲಿ ಈ ಪರಿಸ್ಥಿತಿಯ ನಿರ್ಮಾಣವಾಗಿದೆ.
https://twitter.com/sageelani/status/1157651337498320896