Dharwad
ವಿನಯ್ ಕುಲಕರ್ಣಿಗೆ ಮತ್ತೆ 14 ದಿನ ಜೈಲೇ ಗತಿ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.
ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ನ್ಯಾಯಾಲಯದಲ್ಲಿ ಇಂದು ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಚಾರಣೆ ಇತ್ತು. ಈ ವೇಳೆ ಸಿಬಿಐ ಅಧಿಕಾರಿಗಳು ಕೋರ್ಟಿಗೆ ನ್ಯಾಯಾಂಗ ಅವಧಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಹಿಂಡಲಗಾ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ವಿನಯ ವಿಚಾರಣೆಗೆ ಹಾಜರಾದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಡಿ. 7ರವರೆಗೆ ವಿಸ್ತರಿಸಿದ್ದಾರೆ. ಇನ್ನೊಂದೆಡೆ ನವೆಂಬರ್ 9ಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ವಿನಯ ಪರ ವಕೀಲರು, ಸಿಬಿಐ ತಕರಾರು ಅರ್ಜಿ ಸಲ್ಲಿಸೋ ಮೊದಲೇ ತಮ್ಮ ಅರ್ಜಿ ನವೆಂಬರ್ 19 ರಂದು ವಾಪಸ್ ಪಡೆದಿದ್ದರು. ಬಳಿಕ ಮರು ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರಾದರೂ ಇಂದು ಕೂಡ ವಿನಯ್ ಪರ ವಕೀಲರಿಂದ ಯಾವುದೇ ಜಾಮೀನು ಅರ್ಜಿ ಸಲ್ಲಿಕೆಯಾಗಲೇ ಇಲ್ಲ.
ಮತ್ತೊಂದು ಕಡೆ ಯೋಗೇಶ್ ಗೌಡ ಹತ್ಯೆಯಾದಾಗ ತನಿಖಾಧಿಕಾರಿಯಾಗಿದ್ದ ಉಪನಗರ ಠಾಣೆಯ ಇನ್ಸ್ ಪೆಕ್ಟರ್ ಚನ್ನಕೇಶವ ಟಿಂಗರಿಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನವೆಂಬರ್ 30 ಕ್ಕೆ ಮುಂದೂಡಿದೆ. ಇಂದು ಟಿಂಗರಿಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಬಿಐ ಪರ ವಕೀಲರು ತಕರಾರು ಅರ್ಜಿ ಸಹ ಸಲ್ಲಿಸಿದ್ದಾರೆ.

