ಬೆಂಗಳೂರು: ನನ್ನ ಸಹೋದರನ ಸಾವಿಗೆ ಆತನ ಪತ್ನಿಯೇ ಕಾರಣವಾಗಿದ್ದು, ಇದು ಹಾರ್ಡ್ ಅಟ್ಯಾಕ್ ಅಲ್ಲ ಕೊಲೆ ಅಂತಾ ಬಂದ ದೂರು ಆಧರಿಸಿ, ಮರು ತನಿಖೆಗೆ ಇಳಿದ ಪೊಲೀಸರು ಬರೋಬ್ಬರಿ 6 ತಿಂಗಳ ಬಳಿಕ ತಹಶೀಲ್ದಾರ್ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದಿದ್ದಾರೆ.
ಬೆಂಗಳೂರು ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಂತಿಯಾಜ್ ಪಾಷಾ ಶವವನ್ನು ಇಂದು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಸಹೋದರ ದೂರು ನೀಡಿದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲಾಗಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ. ಸುಮಾರು ಆರು ತಿಂಗಳ ಹಿಂದೆ ಇಂತಿಯಾಜ್ ಪಾಷಾ ತಮ್ಮ ಮನೆಯಲ್ಲಿ ಮೃತಪಟ್ಟಿದ್ದರು. ಆಗ ಅವರ ಸಾವು ಹೃದಯಾಘಾತದಿಂದ ಸಂಭವಿಸಿದೆ ಎಂದು ಭಾವಿಸಿ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದರು.
ಆದರೆ, ಇಂತಿಯಾಜ್ ಪಾಷಾ ಪತ್ನಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧವಿದ್ದು, ಆತನನ್ನೇ ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬೆಳವಣಿಗೆಯಿಂದ ಅನುಮಾನಗೊಂಡ ಇಂತಿಯಾಜ್ ಸಹೋದರ, ತಮ್ಮ ಸಹೋದರನ ಪತ್ನಿ ಮತ್ತು ಆಕೆಯ ಸ್ನೇಹಿತನ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.
ಸಹೋದರನ ದೂರಿನ ಮೇರೆಗೆ ತಹಶೀಲ್ದಾರ್ ಆದೇಶದ ಅನ್ವಯ, HAL ಪೊಲೀಸ್ ಠಾಣೆಯಲ್ಲಿ udr ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ತನಿಖೆಯ ಭಾಗವಾಗಿ ಇಂದು ತಹಶೀಲ್ದಾರ್ ಸಮ್ಮುಖದಲ್ಲಿ ಖಬರಿಸ್ತಾನ್ನಲ್ಲಿ ಹೂಳಲಾಗಿದ್ದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸುವ ಮೂಲಕ ಸಾವಿಗೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಹೂತಿದ್ದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

