ಬೆಂಗಳೂರು: ಫನಿ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವ ಭೀತಿ ಹೆಚ್ಚಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸುಳಿಗಾಳಿಯ ಸೃಷ್ಟಿಯಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಫನಿ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಕೂಡ ತಟ್ಟಲಿದೆ. ಫನಿ ಚಂಡಮಾರುತ ದುರ್ಬಲವಾದರೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮಂಡ್ಯ, ಮೈಸೂರು ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಸುಳಿಗಾಳಿಯಿಂದ ಮಳೆರಾಯನ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿಯಲ್ಲಿ ಹೈ ಅಲರ್ಟ್ ಫೋಷಿಸಲಾಗಿದ್ದು ಈ ಪ್ರದೇಶಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಫನಿ ಎಫೆಕ್ಟ್ ರಾಜ್ಯದ ಬಹುತೇಕ ಭಾಗದಲ್ಲಿ ಮೇ 4ರ ತನಕ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಫನಿ ಚಂಡಮಾರುತ ದೊಡ್ಡ ಮಟ್ಟದಲ್ಲಿ ರಾಜ್ಯದ ಮೇಲೆ ಪ್ರಭಾವ ಬೀರದೇ ಇದ್ದರೂ ಸಣ್ಣ ಪ್ರಮಾಣದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.