ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಆಗಮನದ ನಿರೀಕ್ಷೆ ಹುಸಿಯಾಗಿದ್ದರಿಂದ ಶಾಸಕ ಡಿ.ಸಿ. ತಮ್ಮಣ್ಣ ಅವರ ಮಗ ಸಂತೋಷ್ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮದ್ದೂರು ತಾಲೂಕಿನ ಹೊನ್ನಲಗೆರೆ ಗ್ರಾಮದಲ್ಲಿ ನಡೆದಿದೆ.
ಮದ್ದೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿ.ಸಿ.ತಮ್ಮಣ್ಣ ಪರ ಪ್ರಚಾರ ಮಾಡಲು ನಿಖಿಲ್ ಬರುತ್ತಾರೆ ಎಂದು ಗುರುವಾರ ಸಂಜೆ 6 ಗಂಟೆಯಿಂದ ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಕಾರಣಾಂತರಗಳಿಂದ ನಿಖಿಲ್ ಪ್ರಚಾರಕ್ಕೆ ಬರಲು ಆಗಿಲ್ಲ. ಇದರಿಂದ ಸಂಜೆ ಆರು ಗಂಟೆಯಿಂದ ರಾತ್ರಿ ಸುಮಾರು 10 ಗಂಟೆವರೆಗೆ ಕಾದುಕುಳಿತಿದ್ದ ಅಭಿಮಾನಿಗಳು ಸಿಟ್ಟಿನಿಂದ ಶಾಸಕ ಡಿ.ಸಿ.ತಮ್ಮಣ್ಣನ ಮಗ ಸಂತೋಷ್ ಕಾರಿಗೆ ಘೆರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ನಿಖಿಲ್ ಆಗಮಿಸದಿದ್ದರೆ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವುದಿಲ್ಲ ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.