ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ (Diesel Price) ಏರಿಕೆಯಿಂದ ತತ್ತರಿಸಿರುವ ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumr) ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ.
ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ 44% ರಷ್ಟು ಏರಿಕೆ ಮಾಡಲು ಪ್ರಸ್ತಾಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಟಿಕೆಟ್ ದರವನ್ನು 33% ರಷ್ಟು ಹೆಚ್ಚಿಸಲು ಅನುಮತಿ ಕೋರಿದೆ. ಇದರೊಂದಿಗೆ ಕಲ್ಯಾಣ ಕರ್ನಾಟಕ (KKRTC) ಮತ್ತು ವಾಯುವ್ಯ ಕರ್ನಾಟಕ (NWKRTC) ಸಾರಿಗೆ ಸಂಸ್ಥೆಗಳೂ ಸಹ ದರ ಏರಿಕೆಗೆ ಒತ್ತಾಯಿಸಿವೆ.
ಕರ್ನಾಟಕ ಸರ್ಕಾರ ಈ ಹಿಂದೆ ಜನವರಿ 5, 2025 ರಿಂದ ಜಾರಿಗೆ ಬರುವಂತೆ ಸರ್ಕಾರಿ ಬಸ್ಗಳ ಟಿಕೆಟ್ ದರವನ್ನು 15% ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಈಗ ಸಾರಿಗೆ ಸಂಸ್ಥೆಗಳು ಮತ್ತೊಮ್ಮೆ ದರ ಪರಿಷ್ಕರಣೆಗಾಗಿ ಸರ್ಕಾರಕ್ಕೆ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿವೆ. ಸಾರಿಗೆ ನಿಗಮಗಳು ದರ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ತಕ್ಷಣವೇ ಈ ಕ್ರಮ ಕೈಗೊಳ್ಳದಿದ್ದರೆ ಸಂಸ್ಥೆಗಳು ಸಂಪೂರ್ಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿವೆ ಎಂದು ಸಿಎಂಗೆ ಮನವರಿಕೆ ಮಾಡಿಕೊಟ್ಟಿವೆ.

ದರ ಏರಿಕೆಗೆ ಕಾರಣಗಳೇನು?
ಮೇ 25 ರವರೆಗಿನ ಇಂಧನ ದರ ಏರಿಕೆಯು ನಿಗಮಗಳ ಸೊರಗುವಿಕೆಗೆ ಪ್ರಮುಖ ಕಾರಣವಾಗಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ಡೀಸೆಲ್ ದರ ಏರಿಕೆಯಾಗಿದೆ. ಇದರಿಂದಾಗಿ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ ಬರೋಬ್ಬರಿ 7.81 ರೂ. ಏರಿಕೆ ಕಂಡಿತ್ತು. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?
ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆ, ಇನ್ನೊಂದೆಡೆ ದಿನೇ ದಿನೇ ಗಗನಕ್ಕೇರುತ್ತಿರುವ ಕಾರ್ಯಾಚರಣಾ ವೆಚ್ಚ ಹಾಗೂ ಸಾರಿಗೆ ನೌಕರರ ವೇತನ ಪರಿಷ್ಕರಣೆ ಈ ತ್ರಿವಳಿ ಸವಾಲುಗಳಿಂದಾಗಿ ಸಾರಿಗೆ ನಿಗಮಗಳ ಮೇಲಿನ ಆರ್ಥಿಕ ಹೊರೆ ಮತ್ತು ಆಡಳಿತಾತ್ಮಕ ಜವಾಬ್ದಾರಿ ಈಗ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ.
ಈಗಾಗಲೇ ನಷ್ಟದ ಸುಳಿಗೆ ಸಿಲುಕಿರುವ ಸಾರಿಗೆ ಸಂಸ್ಥೆಗಳನ್ನು ಉಳಿಸಿಕೊಳ್ಳಲು ಟಿಕೆಟ್ ದರ ಏರಿಕೆ ಅನಿವಾರ್ಯ ಎಂಬುದು ಅಧಿಕಾರಿಗಳ ವಾದವಾಗಿದೆ. ಸದ್ಯ ಪ್ರಸ್ತಾವನೆ ಮುಖ್ಯಮಂತ್ರಿಗಳ ಅಂಗಳದಲ್ಲಿದ್ದು, ಸರ್ಕಾರ ಎಷ್ಟು ಪ್ರಮಾಣದ ದರ ಏರಿಕೆಗೆ ಹಸಿರು ನಿಶಾನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
