ನವದೆಹಲಿ: ಕೃಷಿ ಸಾಲಮನ್ನಾದಿಂದ ರೈತರ ಜೀವನ ಮತ್ತು ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಆಗಲ್ಲ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಾಲಮನ್ನಾದಿಂದ ರೈತರ ಸಮಸ್ಯೆಗಳನ್ನು ಅಂತ್ಯಗೊಳಿಸಲು ಸಾಧ್ಯವಿಲ್ಲ. ರೈತರಿಗೆ ನಗದು ವರ್ಗಾವಣೆ ಮಾಡುವುದರಿಂದ ಕೃಷಿ ವಲಯದ ಜನರ ಆರ್ಥಿಕ ಸ್ಥಿತಿಗತಿಯಲ್ಲಿ ಬದಲಾವಣೆ ತರಲು ಸಾಧ್ಯವಾಗಲಿದೆ. ನನ್ನ ಪ್ರಕಾರ ಕೃಷಿ ಸಾಲಮನ್ನಾ ಒಂದೇ ಒಂದು ಸಮಸ್ಯೆಗೆ ಪರಿಹಾರ ಸಿಗಲ್ಲ. ರಾಜ್ಯ ಅಥವಾ ಕೇಂದ್ರ ಸರ್ಕಾರ ಬಿತ್ತನೆ ಸಮಯದಲ್ಲಿ ಬೀಜ ಮತ್ತು ರಸಗೊಬ್ಬರ ಖರೀದಿಗಾಗಿ ಅವರ ಖಾತೆಗೆ ನಗದು ವರ್ಗಾಯಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಕೃಷಿ ವರ್ಗದ ಜನರನ್ನು ಖುಷಿಪಡಿಸಲು ಸಾಲಮನ್ನಾ ಎಂಬ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ. ಈಗಾಗಲೇ ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನ ಸಾಲಮನ್ನಾ ಘೋಷಣೆ ಮಾಡಿವೆ. ಕರ್ನಾಟಕ ರಾಜ್ಯ ಸರ್ಕಾರ ಸಹ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಘೋಷಿಸಿದ್ದು ಋಣಮುಕ್ತ ಪ್ರಮಾಣ ಪತ್ರವನ್ನು ವಿತರಿಸುತ್ತದೆ. ಕಾಂಗ್ರೆಸ್ ಸರ್ಕಾರ ರಚಿಸಿರುವ ರಾಜ್ಯಗಳಲ್ಲಿ ಸಾಲಮನ್ನಾ ಘೋಷಣೆ ಮಾಡಲಾಗುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷದ ನಾಯಕರು, ಪ್ರಧಾನಿಗಳು ದೇಶದ ಎಲ್ಲ ರೈತರ ಸಂಪೂರ್ಣ ಸಾಲಮನ್ನಾ ಮಾಡುವವರೆಗೂ ಮೋದಿ ಅವರಿಗೆ ನಿದ್ದೆ ಮಾಡಲು ಬಿಡಲ್ಲ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಈ ಸಂಬಂಧ ಪ್ರಧಾನಿಗಳು ತಮ್ಮ ಸಾರ್ವಜನಿಕ ಸಮಾವೇಶಗಳಲ್ಲಿ ಸಾಲಮನ್ನಾ ಆದೇಶಿಸುವ ಕುರಿತ ಸುಳಿವು ನೀಡುತ್ತಾ ಬಂದಿದ್ದಾರೆ. ಸಾಲಮನ್ನಾ ಅಥವಾ ಅದೇ ಉದ್ದೇಶ ಹೊಂದಿರುವ ಬೇರೆ ಯೋಜನೆಗಳನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆಗಳಿವೆ. ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್, ಕೃಷಿ ಸಾಲಮನ್ನಾ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv