ಚಿಕ್ಕಮಗಳೂರು: ಸರ್ಕಾರ ಸಂತ್ರಸ್ತರಿಗೆ ನೆರೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಹಿನ್ನೆಲೆ ಮಲೆನಾಡಿನಲ್ಲಿ ನಿರಾಶ್ರಿತ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಎಸ್.ಕೆ ಮೇಗಲ್ ಗ್ರಾಮದಲ್ಲಿ ವಿಷ ಸೇವಿಸಿ ಚಂದ್ರೇಗೌಡ(55) ಸಾವಿಗೆ ಶರಣಾಗಿದ್ದಾರೆ. ಮಲೆನಾಡ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಚಂದ್ರೆ ಗೌಡರ ಒಂದು ಎಕ್ರೆ ಗದ್ದೆ ಕೊಚ್ಚಿಕೊಂಡು ಹೋಗಿತ್ತು. ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದರು. ಮಳೆಯಿಂದ ಹಾನಿಯಾಗಿದ್ದ ಗದ್ದೆ-ತೋಟವನ್ನು ಸರಿ ಮಾಡಲು ರೈತ ಕೈ ಸಾಲ ಕೂಡ ಮಾಡಿಕೊಂಡಿದ್ದರು.
ಇತ್ತ ಸರ್ಕಾರ ಇಂದು ನೆರೆ ಪರಿಹಾರ ಕೊಡುತ್ತೆ ನಾಳೆ ಪರಿಹಾರ ನೀಡುತ್ತೆ ಎಂದು ಕಾದು ಕುಳಿತಿದ್ದ ಚಂದ್ರೇಗೌಡರು, ಸರ್ಕಾರ ಪರಿಹಾರ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಸಾಕಷ್ಟು ಬೇಸತ್ತು ಹೋಗಿದ್ದರು. ಅತ್ತ ಬೆಳೆ ಹಾನಿಯಾಗಿ ನಷ್ಟವಾಗಿ, ಇತ್ತ ಸಾಲ ಕಟ್ಟಲು ಹಣವಿಲ್ಲದೆ ಕಂಗಾಲಾಗಿದ್ದರು. ಹೀಗಾಗಿ ಸಾಲಕ್ಕೆ ಹೆದರಿ, ಪರಿಹಾರ ಹಣ ಬರದಿದ್ದಕ್ಕೆ ನೊಂದು ಚಂದ್ರೆ ಗೌಡರು ಆತ್ಮಹತ್ಯೆಗೆ ಶರಣಾಗಿದ್ದಾರೆ.