ಬೆಂಗಳೂರು: ಕಸ್ತೂರಿ ರಂಗನ್ ಸಮಿತಿ ವರದಿ ವಿಚಾರದಲ್ಲಿ ಮಲೆನಾಡಿನ ರೈತರು (Farmers) ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿ ಕೇಂದ್ರಕ್ಕೆ ತನ್ನ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ವರದಿ ಜಾರಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ಕರಡು ಅಧಿಸೂಚನೆಯಲ್ಲಿ ಕರ್ನಾಟಕದ 1,576 ಗ್ರಾಮಗಳ ವ್ಯಾಪ್ತಿಯ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಸೇರಿವೆ. ಜನವಸತಿ ಪ್ರದೇಶಗಳು ಹಾಗೂ ಕೃಷಿ ಭೂಮಿಯೂ ಪಟ್ಟಿಯಲ್ಲಿರುವುದರಿಂದ ಮಲೆನಾಡಿನ ರೈತರಲ್ಲಿ ಸಹಜವಾಗಿಯೇ ಆತಂಕ ಮೂಡಿದೆ.
ಆದರೆ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ. ಮಲೆನಾಡಿನ ಜನರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸಿಜೆಐಗೆ ಸರಣಿ ದೂರು -ರಾಜಸ್ಥಾನ ಹೈಕೋರ್ಟ್ ಹಂಗಾಮಿ ಸಿಜೆ ಬದಲಾವಣೆಗೆ ಸುಪ್ರೀಂ ನ್ಯಾ.ಸಂದೀಪ್ ಮೆಹ್ತಾ ಪತ್ರ
ಈ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿಯೂ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಕೂಡ ಕರಡು ಅಧಿಸೂಚನೆಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ರೈತರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ವಿಪಕ್ಷ ನಾಯಕರು ಕೇಂದ್ರದ ಕರಡು ಅಧಿಸೂಚನೆಯನ್ನು ಖಂಡಿಸುವ ಬದಲು ಮಲೆನಾಡಿನ ರೈತರಲ್ಲಿ ಗೊಂದಲ ಮೂಡಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಈ ಪ್ರಮುಖ ವಿಚಾರದ ಕುರಿತು ಚರ್ಚಿಸುವ ಬದಲು ಗದ್ದಲ ಮಾಡಿ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತಿದ್ದರು. ಅವರ ಆಶಯದಂತೆ ರೈತರ ಪರವಾಗಿ ಕೆಲಸ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಇದನ್ನೂ ಓದಿ: ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ: ಖಾದರ್ ಸ್ಫೋಟಕ ಹೇಳಿಕೆ

