ತುಮಕೂರು: ರಾಜ್ಯದಲ್ಲಿ ಮಹದಾಯಿ ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಟೊಮೆಟೊ ಬೆಲೆ ಪಾತಾಳಕ್ಕಿಳಿದಿದ್ದರಿಂದ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಪಾವಗಡದ ರೈತರು ರಸ್ತೆ ಮೇಲೆ ಟೊಮೆಟೊ ಚೆಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಟೊಮೆಟೊ ಬೆಲೆ ಕೆಜಿಗೆ 5-6 ರೂ. ಗೆ ಕುಸಿದಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಮಧ್ಯಪ್ರವೇಶ ಮಾಡಿ ಟೊಮೆಟೊಗೆ 30-40 ರೂ. ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಬೇಕೆ ಬೇಕು ನ್ಯಾಯ ಬೇಕು ಎಂದು ಕೂಗುತ್ತಾ ಪ್ರತಿಭಟನೆ ಮಾಡುತ್ತಿದ್ದಾರೆ.
ಪಾವಗಡ ತಾಲೂಕಿನಲ್ಲಿ ನೂರಾರು ರೈತರು ಟೊಮೆಟೊ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಟೊಮೆಟೊಗೆ ನಿಗದಿತ ಬೆಲೆ ಸಿಗದೇ ಅವರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೆಲವರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ರೈತರ ಸಂಕಷ್ಟ ದೂರ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.