ಚಿಕ್ಕಬಳ್ಳಾಪುರ: ಸ್ವಾತಂತ್ರ್ಯೋತ್ಸವದ ದಿನದಂದೇ ತಿರಂಗ ಹಿಡಿದು ರೈತರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಡಲಾಗಿತ್ತು. ಈ ವೇಳೆ ಸ್ವಾತಂತ್ರ್ಯ ದಿನಾಚರಣೆಯ ವೇದಿಕೆ ಬಳಿ ಪ್ರತಿಭಟನೆ ಮಾಡಲು ಆಗಮಿಸಿದ ರೈತರನ್ನು ಜೂನಿಯರ್ ಕಾಲೇಜು ಆವರಣದ ಗೇಟ್ ಬಳಿಯೇ ಪೊಲೀಸರು ತಡೆ ಒಡ್ಡಿದರು.
ಪೊಲೀಸರ ನಾಕಾ ಬಂಧಿಯನ್ನು ಬೇಧಿಸಿ ಕೆಲ ರೈತರು ವೇದಿಕೆ ಬಳಿ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಂತೆ ಪೊಲೀಸರು ರೈತರನ್ನು ವಶಕ್ಕೆ ಪಡೆದರು. ಈ ವೇಳೆ ರೈತರು ತೀವ್ರತರವಾದ ಪ್ರತಿರೋಧ ತೋರಿದ್ದು, ನೆಲದ ಮೇಲೆ ಬಿದ್ದು ಮಲಗಿ ಪ್ರತಿಭಟಿಸಿದರು. ರೈತರ ತೀವ್ರ ವಿರೋಧದ ನಡುವೆಯೂ ಪೊಲೀಸರು ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದು ಬಸ್ನೊಳಗೆ ಕೂಡಿ ಹಾಕಿದರು. ಇದನ್ನೂ ಓದಿ: ಭೂಮಿಯಿಂದ 30 ಕಿ.ಮೀ ಎತ್ತರದಲ್ಲಿ ಹಾರಾಡಿತು ರಾಷ್ಟ್ರಧ್ವಜ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಕೆಐಎಡಿಬಿ ವತಿಯಿಂದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಇಂದು ಸಹ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಿರಂಗ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸುವ ಮುಖಾಂತರ ಭೂಸ್ವಾಧೀನ ಪ್ರಕ್ರಿಯೆಗೆ ತಮ್ಮ ವಿರೋಧ ವ್ಯಕ್ತಪಡಿಸಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೇದಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ರೈತರು ಮುಂದಾಗಿದ್ದರು.
ಆದರೆ ಇದಕ್ಕೆ ಅವಕಾಶ ಕೊಡದ ದೇವನಹಳ್ಳಿ ಪೊಲೀಸರು ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ. 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇವನಹಳ್ಳಿ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ ಸುಧಾಕರ್ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: ದೇಶದ ಅಭಿವೃದ್ಧಿಗೆ ಕುಟುಂಬ ರಾಜಕಾರಣದಿಂದ ಲಾಭ ಇಲ್ಲ: ಮೋದಿ
Live Tv