ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆ ತನ್ನ ಮೂವರು ಮಕ್ಕಳಿಗೆ ತಂದೆಯೇ ವಿಷ ನೀಡಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ.
ತಂದೆ ಲೋಕೇಶ್(40) ಹಾಗೂ ಮಕ್ಕಳಾದ ಸೃಷ್ಟಿ(14), ಸ್ನೇಹಾ(12), ಮಂಜುನಾಥ್(8) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದ ತಂದೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಹೀಗಾಗಿ ಊಟಕ್ಕೆ ವಿಷ ಸೇರಿಸಿ ತಂದೆ ಮಕ್ಕಳು ಸೇವಿಸಿದ್ದಾರೆ. ಆದ್ರೆ ಈ ವೇಳೆ ಅಕ್ಕಪಕ್ಕದ ಮನೆಯವರು ಮಕ್ಕಳ ನರಳಾಟ ಕೇಳಿ ಮನೆ ಒಳಗಡೆ ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ಪ್ರಮಾಣದಲ್ಲಿ ವಿಷ ಸೇವಿಸಿದ್ದ ಪರಿಣಾಮ ತಂದೆ ಸ್ಥಿತಿ ಗಂಭೀರವಾಗಿದೆ. ಆದ್ರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ್ದಕ್ಕೆ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊದಲು ನಾಲ್ವರನ್ನೂ ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ವರ್ಗಾವಣೆ ಮಾಡಲಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.