ಕಲಬುರಗಿ: ಪಕ್ಷದ ಟಿಕೆಟ್ ಹಂಚಿಕೆಗಾಗಿ ಕರೆಯಲಾಗಿದ್ದ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದಿದೆ.
ಇಂದು ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಕ್ಷಕ ಲಕ್ಷ್ಮಣ್ ಕೆ ನೇತೃತ್ವದಲ್ಲಿ ಟಿಕೆಟ್ ಹಂಚಿಕೆ ಸಂಬಂಧ ಸಭೆ ಕರೆಯಲಾಗಿತ್ತು. ಈ ವೇಳೆ ವೀಕ್ಷಕರ ಮುಂದುಗಡೆ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ ಮಾಜಿ ಸಚಿವ ರೇವುನಾಯಕ್ ಬೆಳಮಗಿ ಕಟ್ಟಾ ಬೆಂಬಲಿಗ ಶಿವಲಿಂಗಪ್ಪಾ ಟೆಂಗಳಿ ತಲೆಗೆ ಗಂಭೀರ ಗಾಯಗಳಾಗಿದ್ದು ತೀವ್ರ ರಕ್ತಸ್ರಾವವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಬಿರಾದರ್ ಮೇಲೆ ಹಲ್ಲೆ ಆರೋಪ ಮಾಡಲಾಗಿದ್ದು, ಅವರ ಕುಮ್ಮಕ್ಕಿನಿಂದಲೇ ಜಗಳ ಬಡಿದಾಟ ನಡೆದಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚುನಾವಣೆಗೂ ಮುನ್ನವೇ ಗ್ರಾಮೀಣ ಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದಿದ್ದಿದೆ. ಸಭೆಯಲ್ಲಿ ವಿಕ್ಷಕ ಲಕ್ಷ್ಮಣ್ ಕೆ, ಮಾಜಿ ಸಚಿವ ರೇವುನಾಯಕ್ ಬೆಳಮಗಿ, ಎಮ್ಎಲ್ಸಿ ಬಿಜಿ ಪಾಟೀಲ್, ಅಮರನಾಥ್ ಪಾಟೀಲ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.