ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಹಿರಂಗವಾಗಿ ಗುಡುಗಿದ್ದ ಜಾರಕಿಹೊಳಿ ಸಹೋದರರು ಈಗ ರಾಜ್ಯ ನಾಯಕರ ಬಳಿ ದೂರು ನೀಡಿದ್ದಾರೆ.
ಜಿಲ್ಲೆ ರಾಜಕೀಯದಲ್ಲಿ ಹೆಬ್ಬಾಳ್ಕರ್ ಹಸ್ತಕ್ಷೇಪ ಜಾಸ್ತಿಯಾಗುತ್ತಿದೆ. ಅಷ್ಟೇ ಅಲ್ಲದೇ ಮುಂದೆ ತಮ್ಮನ್ನು ಹಿಂದಿಕ್ಕಬಹುದು ಎನ್ನುವ ಭೀತಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊರಳಿ ಅವರಿಗೆ ಎದುರಾಗಿದೆ. ಹೀಗಾಗಿ ಬದ್ಧ ವೈರಿಗಳಾಗಿದ್ದ ಜಾರಕಿಹೊಳಿ ಸಹೋದರರು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಲ್ಲಿ ದೂರು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಹೀಗೆ ಬಿಟ್ಟರೆ ಮುಂದೊಂದು ದಿನ ತಮ್ಮ ದಾರಿಗೆ ಮುಳ್ಳಾಗುತ್ತಾರೆ ಎನ್ನುವುದು ಜಾರಕಿಹೊಳಿ ಸಹೋದರ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಇತ್ತ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಾ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಗೆ ದೂರು ನೀಡಿದ್ದಾರೆ. ಬೆಳಗಾವಿ ನಾಯಕರ ವಾಗ್ದಾಳಿ, ಭಿನ್ನಾಭಿಪ್ರಾಯದ ಕುರಿತು ಹೈಕಮಾಂಡ್ಗೂ ಮಾಹಿತಿ ತಲುಪಿದೆ. ಹೀಗಾಗಿ ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಿ.ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಳಗಾವಿ ಜಿಲ್ಲೆಯ ನಾಯಕರಲ್ಲಿ ಭಿನ್ನಾಭಿಪ್ರಾಯ ಬಂದಿರುವ ಕುರಿತು ಚರ್ಚೆ ಮಾಡಲಾಗಿದೆ. ಅದನ್ನು ಸರಿಪಡಿಸದಿದ್ದರೆ ಪಕ್ಷದ ಸಂಘಟನೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಬೆಳಗಾವಿಯ ಮೂವರು ನಾಯಕರನ್ನು ಕರೆಸಿ ಸಮಕ್ಷಮವಾಗಿ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://youtu.be/OsceLkVYQ2U