ಲಕ್ನೋ: ದೇಶದಲ್ಲಿ ಓಮಿಕ್ರಾನ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಡಯುತ್ತಿರುವ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಲ್ಲಿಸಿ ಮುಂಬರುವ ಚುನಾವಣೆಯನ್ನು ಮುಂದೂಡಲು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ ಮುಂದಿನ ವಾರ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟ ಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ನಾವು ಉತ್ತರ ಪ್ರದೇಶಕ್ಕೆ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಬಗ್ಗೆ ಮುಂದಿನ ವಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ. ಈಗಾಗಲೇ ಚುನಾವಣೆಯನ್ನು ಮುಂದೂಡುವಂತೆ ಹಲವು ಅಭಿಪ್ರಾಯ ಕೇಳಿಬರುತ್ತಿದೆ ಎಂದರು.
2022ರ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಹೆಚ್ಚಳವಾಗುತ್ತಿರುವುದರಿಂದ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ ಮುಂದೂಡಿ, ರ್ಯಾಲಿ-ಸಮಾರಂಭ ನಿಲ್ಲಿಸಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಕೋರ್ಟ್ ಒತ್ತಾಯ
ನ್ಯಾ. ಶೇಖರ್ ಕುಮಾರ್ ಯಾದವ್ ಒಳಗೊಂಡ ಪೀಠ, ಅರ್ಜಿಯೊಂದರ ವಿಚಾರಣೆ ನಡೆಸುತ್ತಿತ್ತು. ಈ ವೇಳೆ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ ಹಾಗೂ ಮೂರನೇ ಅಲೆಯ ಸಾಧ್ಯತೆ ಇದೆ. ಈಗಾಗಲೇ ಚೀನಾ, ನೆದರ್ಲ್ಯಾಂಡ್, ಜರ್ಮನಿಯಂತಹ ರಾಷ್ಟ್ರಗಳು ಸಂಪೂರ್ಣ ಲಾಕ್ಡೌನ್ ಮಾಡಿದೆ. ನಮ್ಮಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಭೆ, ಸಮಾರಂಭ ಮತ್ತು ಮುಂದಿನ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಸಲಹೆ ನೀಡಿದೆ.
ಕೊರೊನಾ ಎರಡನೇ ಅಲೆಯ ಸಂದರ್ಭ ದೇಶದಲ್ಲಿ ಲಕ್ಷಾಂತರ ಮಂದಿಗೆ ಸೋಂಕು ತಗುಲಿ ಸಾವನ್ನಪ್ಪಿದ್ದರು. ಈ ವೇಳೆ ಉತ್ತರ ಪ್ರದೇಶದಲ್ಲಿ ನಡೆದ ಗ್ರಾಮಪಂಚಾಯತ್ ಚುನಾವಣೆ ಹಾಗೂ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಇದು ಕೊರೊನಾ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿತ್ತು ಎಂದು ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ
ಉತ್ತರ ಪ್ರದೇಶದಲ್ಲಿ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ವಿಧಾನಸಭಾ ಚುನಾವಣೆ ನಡಿಯಲಿದೆ. ಈಗಾಗಲೇ ಪಕ್ಷಗಳು ಲಕ್ಷಾಂತರ ಮಂದಿಯನ್ನು ಸಾರ್ವಜನಿಕವಾಗಿ ಒಟ್ಟಿಗೆ ಸೇರಿಸಿಕೊಂಡು ಸಭೆ ಸಮಾರಂಭಗಳನ್ನು ಆರಂಭಿಸಿದೆ. ಅಲ್ಲಿ ಕೋವಿಡ್-19 ನಿಯಮಗಳ ಪಾಲನೆ ಆಗುತ್ತಿಲ್ಲ. ಈ ರೀತಿ ಸಾರ್ವಜನಿಕ ಸಭೆ, ಸಮಾರಂಭಗಳು ನಡೆದರೆ ಮತ್ತೇ ಕೊರೊನಾ ಕೇಸ್ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಹಾಗಾಗಿ ಕೂಡಲೇ ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದೆ. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ ಮುಂದಿನ ವಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಬಗ್ಗೆ ತಿಳಿಸಿದೆ. ಇದನ್ನೂ ಓದಿ: ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ
ಈಗಾಗಲೇ ನಿಗದಿಯಾಗಿರುವ ಚುನಾವಣೆ ಕೆಲ ತಿಂಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ 403 ಸ್ಥಾನಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 202 ಸ್ಥಾನ ಪಡೆದ ಪಕ್ಷ ಬಹುಮತ ಪಡೆಯಲಿದೆ.