ಮುಂಬೈ: ಮಹಾರಾಷ್ಟ್ರದ ಲಾತೂರ್ (Latur) ಜಿಲ್ಲೆಯ ಪೊಲೀಸರು ಕಾಕ್ರೋಚ್ ಜನತಾ ಪಾರ್ಟಿ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ (Abhijeet Dipke) ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅನುಮತಿ ಇಲ್ಲದೇ ಸರ್ಕಾರಿ ಶಾಲೆಗೆ ಪ್ರವೇಶಿಸುವುದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪಗಳ ಮೇಲೆ ಈ ಎಫ್ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 132, 329(3), 351(2) ಮತ್ತು 356(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಜಿಲ್ಲಾ ಪಂಚಾಯತ್ ಉರ್ದು ಶಾಲೆಯ 53 ವರ್ಷದ ಶಿಕ್ಷಕಿ ಸಯ್ಯದ್ ಶಮ್ಶಾದ್ಬಾನೋ ಖೈರಾತ್ ಅಲಿ ನೀಡಿದ ದೂರಿನ ಆಧಾರದ ಮೇಲೆ ಔಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. CJP ನಡೆಸುತ್ತಿರುವ ‘ಸ್ಕೂಲ್ ಠೀಕ್ ಕರೋ’ ಅಭಿಯಾನದಡಿ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡುತ್ತಿರುವ ಅಭಿಜೀತ್ ದೀಪ್ಕೆ, ಅಲ್ಲಿನ ಸಮಸ್ಯೆಗಳನ್ನು ಬಹಿರಂಗಪಡಿಸುತ್ತಿದ್ದಾರೆ.

ಅತ್ಯುತ್ಸಾಹದಲ್ಲಿ ಯಡವಟ್ಟು ಮಾಡಿಕೊಂಡ್ರಾ ದೀಪ್ಕೆ?
ಶಿಕ್ಷಕಿಯೊಬ್ಬರು ನೀಡಿದ ದೂರಿನ ಪ್ರಕಾರ, ಮುಂಬೈನಿಂದ 500 ಕಿಲೋಮೀಟರ್ಗೂ ಹೆಚ್ಚು ದೂರದಲ್ಲಿರುವ ಔಸಾ ಸಮೀಪದ ಜಾವಳಿ ಗ್ರಾಮದ ಜಿಲ್ಲಾ ಪಂಚಾಯತ್ ಉರ್ದು ಶಾಲೆಯಲ್ಲಿ ಈ ಘಟನೆ ನಡೆದಿದೆ. ದೀಪ್ಕೆ ಹಾಗೂ ಅವರ ಸಹಚರರು ಯಾವುದೇ ಅನುಮತಿ ಪಡೆಯದೇ ಶಾಲೆಯೊಳಗೆ ಪ್ರವೇಶಿಸಿ, ವಿದ್ಯಾರ್ಥಿಗಳ ನಡುವೆ ಕುಳಿತು ಅವರಿಗೆ ಹಲವು ಪ್ರಶ್ನೆಗಳನ್ನ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಶಾಲೆಯ ಪಾಠ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಯಾಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಶಿಕ್ಷಕರಿಗೆ ಬೆದರಿಕೆ ಆರೋಪ
ಈ ಸಂದರ್ಭದಲ್ಲಿ CJP ನಾಯಕರು ವಿಡಿಯೋ ಚಿತ್ರೀಕರಣ ನಡೆಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ತಮ್ಮ ಭೇಟಿಯ ಸಂದರ್ಭದಲ್ಲಿ ಬೇರೆ ಶಾಲೆಯ ವಿದ್ಯಾರ್ಥಿಗಳನ್ನು ಕರೆತಂದು ತರಗತಿಯಲ್ಲಿ ಕೂರಿಸಲಾಗಿದೆ ಎಂದು ಆರೋಪಿಸುವ ಮೂಲಕ ಶಾಲೆಯ ಹೆಸರಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪವೂ ಇದೆ. ಶಿಕ್ಷಕರನ್ನು ಅಮಾನತುಗೊಳಿಸುವಂತೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

