ಶ್ರೀನಗರ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾಶ್ಮೀರಿ ಸಂಸದರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ದಾರಿತಪ್ಪಿಸುವ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀನಗರ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ (Aga Syed Ruhullah Mehdi) ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ವಿಶ್ವಾದ್ಯಂತ ಶಿಯಾ ಮುಸ್ಲಿಮರು ಆರಾಧಿಸುವ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ವಿಚಾರದಲ್ಲಿ ಕೇಂದ್ರದ ನಡೆಯನ್ನು ಸಂಸದ ಟೀಕಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಮತ್ತು ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಮಹಿಳಾ ಪ್ರತಿಭಟನಾಕಾರರ ಮೇಲೆ ನಡೆದ ಹಲ್ಲೆಯ ವೀಡಿಯೊಗಳನ್ನು ಮೆಹದಿ ಅಪ್ಲೋಡ್ ಮಾಡಿದ್ದರು. ಇದನ್ನೂ ಓದಿ: ಕತಾರ್ನಲ್ಲಿ 10 ಶಂಕಿತ ಐಆರ್ಜಿಸಿ ಗೂಢಚಾರರ ಬಂಧನ
ಭಯ ಮೂಡಿಸುವ, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ, ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು, ಕೃತ್ರಿಮ ಮತ್ತು ದಾರಿತಪ್ಪಿಸುವ ವಿಷಯಗಳ ಪ್ರಸರಣದ ಬಗ್ಗೆ ಮಾಹಿತಿಯ ಆಧಾರದ ಮೇಲೆ ಶ್ರೀನಗರ ಸಂಸದ ಮತ್ತು ನಗರದ ಮಾಜಿ ಮೇಯರ್ ಜುನೈದ್ ಅಜೀಮ್ ಮಾಟೂ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಪ್ಪು ಮಾಹಿತಿಯನ್ನು ಹರಡುವ ಇಂತಹ ಉದ್ದೇಶಪೂರ್ವಕ ಪ್ರಯತ್ನಗಳು ಶಾಂತಿ, ಭದ್ರತೆ ಮತ್ತು ಒಟ್ಟಾರೆ ಸ್ಥಿರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿ ಜಾಲದ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಹಲವಾರು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ. ಶ್ರೀನಗರದ ಮೂರು ಪ್ರಮುಖ ಪತ್ರಿಕೆಗಳ ಫೇಸ್ಬುಕ್ ಪುಟಗಳನ್ನು ತೆಗೆದುಹಾಕಲಾಗಿದೆ. ಇದನ್ನೂ ಓದಿ: ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್ನ ಅಗ್ಗದ ಡ್ರೋನ್ಗಳ ಸವಾಲು

