ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆ (Belthangady Police Station) ಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ನೀಡಿರುವ ದೂರಿನಡಿ ಪೊಲೀಸರು ಐಪಿಸಿ ಸೆಕ್ಷನ್ 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು), 153ಎ (ದ್ವೇಷದ ಭಾವನೆಗೆ ಉತ್ತೇಜನ), 505 (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಮೇಲೆ ಈ ಕೇಸ್ ದಾಖಲಾಗಿದೆ.
ಏನಿದು ಪ್ರಕರಣ..?: ಇತ್ತೀಚೆಗೆ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನದಲ್ಲಿ ಬಿಜೆಪಿ (BJP) ಯ ಅಭಿನಂದನಾ ಕಾರ್ಯಕ್ರಮ ನಡೆದಿತ್ತು. ಈ ವೇಳೆ ತುಳುವಿನಲ್ಲಿ ಮಾತನಾಡುತ್ತಾ 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ (Siddaramaiah) ಹತ್ಯೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಶಾಸಕರು ಎಡವಟ್ಟು ಮಾಡಿದ್ದರು. ಇದನ್ನೂ ಓದಿ: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ಹರೀಶ್ ಪೂಂಜಾ
ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ (Congress) ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕರು, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆಯೂ ಗರಂ ಆಗಿದ್ದರು. ಹೀಗೆ ಮಾತನಾಡುತ್ತಾ ಸಿಎಂ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಇದಾದ ಬೆನ್ನಲ್ಲೇ ಪೂಂಜಾ ಭಾಷಣದ ತುಣುಕು ಸಾಮಾಜಿಕ ಜಾಲತಾಣಲ್ಲಿ ವೈರಲ್ ಆಗಿದ್ದು, ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳು ಹಿಂದೂಗಳಿಗೆ ಕಠಿಣವಾಗಲಿದೆ: ಕೋಟ ಶ್ರೀನಿವಾಸ ಪೂಜಾರಿ
ಕೊಲೆ ಆರೋಪ ಮಾಡಿದ್ದು ಯಾಕೆ..?; ಹಿಂದೂ ನಾಯಕ ಸತ್ಯಜಿತ್ ಸುರತ್ಕಲ್ (Satyajit Suratkal) ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಈ ವಿಚಾರವನ್ನು ತಮ್ಮ ಭಾಷಣದ ವೇಳೆ ಪ್ರಸ್ತಾಪ ಮಾಡಿದ ಶಾಸಕರು, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಿ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದು ಶಾಸಕರು ಹೇಳಿದ್ದರು.