ಬೆಂಗಳೂರು: ನೈಸ್ ಸಂಸ್ಥೆಯ ಮಾಲೀಕ, ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿಯವರ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಯಶವಂತಪುರ ಕ್ಷೇತ್ರದ ಶಾಸಕ ಸೋಮಶೇಖರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಶಾಸಕನಾಗಿರುವ ಜೊತೆಗೆ ಸದನ ಸಮಿತಿಯ ಸದಸ್ಯ ಕೂಡ ಆಗಿದ್ದೇನೆ. ಅನೇಕ ಹಗರಣಗಳನ್ನು ಮತ್ತು ಅವ್ಯವಹಾರಗಳನ್ನು ಗಮನಕ್ಕೆ ಸದನ ಸಮಿತಿಯಲ್ಲಿ ಗಮನಕ್ಕೆ ತಂದಿದ್ದೇವೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಅಶೋಕ್ ಖೇಣಿಯವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದಕ್ಕೆ ನನ್ನ ವೈಯಕ್ತಿಕ ವಿರೋಧವಿದೆ. ಅಲ್ಲದೇ ಕೆಲ ಜಿಲ್ಲೆಗಳ ಶಾಸಕರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರೈತರ ಆತ್ಮಹತ್ಯೆಗೆ ಕುಡಿತ, ಜೂಜು ಕಾರಣ ಎಂದಿದ್ದ ಖೇಣಿ ಕಾಂಗ್ರೆಸ್ ಸೇರ್ಪಡೆ
ಯಾವ ಕಾರಣಕ್ಕೂ ಖೇಣಿಯವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದು ಒಳ್ಳೆಯದಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನಮ್ಮ ವಿರೋಧವನ್ನು ಲೆಕ್ಕಿಸದೇ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷಕರು ಪಕ್ಷಕ್ಕೆ ಸೇರ್ಪಡೆ ಮಾಡಿದ್ರೆ, ಮುಂದೆ ಏನ್ ಮಾಡ್ಬೇಕು ಅಂತಾ ತೀರ್ಮಾನ ಮಾಡ್ತೇವೆ ಅಂತ ಅವರು ಹೇಳಿದ್ರು.
ಸದನ ಸಮಿತಿಯಲ್ಲಿ ಮಂಡನೆಯಾದ ವಿಚಾರದ ಬಗ್ಗೆ ಇಡೀ ರಾಜ್ಯದ ಜನತೆಗೆ ತಿಳಿದಿದೆ. ಹೀಗಾಗಿ ಗೆಲುವಿಗಾಗಿ ಓರ್ವ ಅಭ್ಯರ್ಥಿ ಬೇಕೆಂಬ ಒಂದೇ ಕಾರಣಕ್ಕಾಗಿ ಖೇಣಿಯವರನ್ನು ಪಕ್ಷಕ್ಕೆ ತೆಗೆದುಕೊಂಡು ಬರಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದನ ಸಮಿತಿಯಲ್ಲಿ ನಿರ್ಧರವಾದ ವಿಚಾರದ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ಕಾರಣಕ್ಕಾಗಿ ಖೇನಿಯವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಸರಿಯಲ್ಲ. ಯಾಕಂದ್ರೆ ಪಕ್ಷಕ್ಕೆ ಕಳಂಕರಹಿತ ಇರುವವರನ್ನು ಸೇರ್ಪಡೆ ಮಾಡಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಅಂದ್ರು.