ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕಿತ್ತೆಗೆರೆ ಗ್ರಾಮದಲ್ಲಿ ಕಾಡಾನೆಯೊಂದನ್ನು ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಡಾನೆ ಸೆರೆಗೆ ಆಲೂರು ತಾಲೂಕಿನ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಿತ್ತೆಗೆರೆ ಗ್ರಾಮದ ಸಮೀಪ 15ಕ್ಕೂ ಹೆಚ್ಚು ಕಾಡಾನೆ ಹಿಂಡನ್ನು ಗುರುತಿಸಿ ಕಾರ್ಯಾಚರಣೆಗೆ ಚಾಲನೆ ನೀಡಲಾಗಿತ್ತು. ಹೆಚ್ಚು ಉಪಟಳ ನೀಡುತ್ತಿದ್ದ ಸುಮಾರು 30 ರಿಂದ 35 ವರ್ಷದೊಳಗಿನ ಗಂಡಾನೆಯೊಂದನ್ನು ಇದೀಗ ಸೆರೆ ಹಿಡಿಯಲಾಗಿದೆ.
ಸಾಕಾನೆಗಳೊಂದಿಗೆ ಕಾರ್ಯಾಚರಣೆ ನಡೆಸುವ ಮೂಲಕ ಅರಣ್ಯ ಇಲಾಖೆ ಎರಡು ಆನೆಗಳನ್ನು ಹಿಡಿಯುವ ಕಾರ್ಯಾಚರಣೆ ಮುಂದಾಗಿದೆ. ಅರವಳಿಕೆ ನೀಡಿದ 25 ನಿಮಿಷಗಳಲ್ಲಿ ಯೋಗೇಶ್ ಎಂಬವರ ಕಾಫಿ ತೋಟದಲ್ಲಿ ಕಾಡಾನೆ ನೆಲಕ್ಕುರುಳಿತು. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಾಕಾನೆಗಳ ಸಹಕಾರದಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈಗ ಸೆರೆಯಾಗಿರುವ ಆನೆಯನ್ನು 2 ಸಾಕಾನೆಗಳ ಜೊತೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಲ್ಲಿರುವ ಆನೆಧಾಮಕ್ಕೆ ಕಳುಹಿಸಿಕೊಡಲಾಗಿದೆ. ಎರಡು ದಿನಗಳ ನಂತರ ಮತ್ತೊಂದು ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗುವುದೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv