ಬೆಂಗಳೂರು: ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 35 ದೃಶ್ಯಗಳ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಕಾಶ್ಮೀರ ಮಾಡಲು ಸರ್ಕಾರ ಹೊರಟಿದೆ. ಇದನ್ನು ತೋರಿಸಲು ಈ ವಿಡಿಯೋ ಬಿಡುಗಡೆ ಮಾಡಿದ್ದೇನೆ ಎಂದು ಹೇಳಿದರು.
ಸರ್ಕಾರ ಯಾವುದೇ ತಪ್ಪು ಮಾಡದೇ ಇದ್ದಿದ್ದರೆ, ಪೊಲೀಸರು ಇಂತಹ ವರ್ತನೆ ತೋರಿಸದೇ ಹೋಗಿದ್ದರೆ ಏನು ಆಗುತ್ತಿರಲಿಲ್ಲ. ಎಲ್ಲಾ ಜಿಲ್ಲೆಯಲ್ಲಿ ಪ್ರತಿಭಟನೆ ನಡೆದಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಇಂತಹ ಘಟನೆ ನಡೆದಿದ್ದು, ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು. ಈ ಎಲ್ಲ ಘಟನೆಗಳಿಗೆ ಪೊಲೀಸ್ ಆಯುಕ್ತ ಹರ್ಷ ಅವರೇ ಕಾರಣ. ಕೂಡಲೇ ಅವರನ್ನು ಅಮಾನತುಗೊಳಿಸಬೇಕೆಂದು ಎಚ್ಡಿಕೆ ಆಗ್ರಹಿಸಿದರು.
ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ತನಿಖೆ ಮಾಡುತ್ತಿದ್ದಾರೆ. ಸರ್ಕಾರ ಹೇಳಿದಂತೆ ಅವರು ವರದಿ ನೀಡುತ್ತಾರೆ. ಜನತಾ ಅದಾಲತ್ ನಲ್ಲಿ ಜನರೇ ಈ ವಿಡಿಯೋ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರೇ ಇಲ್ಲಿ ತಪ್ಪು ಮಾಡಿದ್ದಾರೆ ಎಂದು ಕುಮಾರಸ್ವಾಮಿ ದೂರಿದರು.
ಅಂಗಡಿ ಮುಂದೆ ನಿಂತವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಕಲ್ಲು ತುಂಬಿದ್ದ ಗಾಡಿ 4 ಟ್ರಿಪ್ ಬೇರೆ ಕಡೆ ಹೊಡೆದಿತ್ತು. ಉದ್ದೇಶ ಪೂರ್ವಕವಾಗಿ ಕಲ್ಲು ತುಂಬಿಸಿಕೊಂಡು ಬಂದಿರಲಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಬಿಡುಗಡೆ ಮಾಡಿದ್ದೇನೆ ಎಂದು ತಿಳಿಸಿದರು.
ಸಿಟಿಜನ್ ಫೋರಂನಿಂದ ಜನತಾ ಆಂದೋಲನ ಮಾಡಲು ತೀರ್ಮಾನ ಮಾಡಲಾಗಿತ್ತು. ಈ ಸಂಬಂಧ ನಿವೃತ್ತ ನ್ಯಾ.ಗೋಪಾಲಗೌಡ, ಸುಗತ ಶ್ರೀನಿವಾಸ್ ಸೇರಿ 3 ಜನತಾ ತಂಡ ರಚನೆ ಮಾಡಿ ಜನತಾ ಅದಾಲತ್ ಮಾಡಲಾಗಿತ್ತು. ಮಂಗಳೂರು ಗಲಭೆ ಸಂಬಂಧ ದಾಖಲಾತಿ ಸಂಗ್ರಹ ಮಾಡಿದ್ದೇನೆ. ವಿಧಾನಸಭೆಯಲ್ಲಿ ಈ ವಿಚಾರದ ಬಗ್ಗೆ ಮಾಡುತ್ತೇನೆ. ಪೊಲೀಸರು ಮಾಡಿದ ತಪ್ಪನ್ನು ಚರ್ಚೆ ಮಾಡುತ್ತೇನೆ. ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಪ್ರಕರಣ ತಿರುಚಲು ಹೋಗುತ್ತಿದೆ. ಮೊನ್ನೆ ಜನತಾ ಅದಾಲತ್ ಮಾಡಲು ಹೋದಾಗ ಅಲ್ಲಿನ ಎಸ್ಐ ಅದಕ್ಕೆ ಅವಕಾಶ ನೀಡಲಿಲ್ಲ. ಪೊಲೀಸರಿಗೆ ಈ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದರು.