ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ (75) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ.
ಸತ್ಯನಾರಾಯಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ದಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಹುಟ್ಟೂರು ಮೈಸೂರು ತಾಲೂಕಿನ ಗುಂಜ್ರಾಲ್ ಛತ್ರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ವಿಶ್ವನಾಥ್, ಸಚಿವರಾದ ಜಿ.ಟಿ.ದೇವೆಗೌಡ ಮತ್ತು ಪುಟ್ಟರಂಗಶೆಟ್ಟಿ ಅವರು ಸತ್ಯನಾರಾಯಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದರು.
ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಹೋದ ನಂತರ 2008ರಲ್ಲಿ ಚುನಾವಣೆಯಲ್ಲಿ ಸ್ಫರ್ಧೆ ಮಾಡಿ ಗೆಲವು ಸಾಧಿಸಿದ್ದರು. 2014ರಲ್ಲಿ ಮತ್ತೆ ಸತ್ಯನಾರಾಯಣ ಅವರು ಸಚಿವ ಜಿ.ಟಿ.ದೇವೇಗೌಡರ ಪ್ರತಿಸ್ಪರ್ಧಿಯಾಗಿ ಚುನಾವಣೆಯಲ್ಲಿ ನಿಂತು ಸೋತಿದ್ದರು.