ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಗಣೇಶ ಹಬ್ಬದ ಪ್ರಯುಕ್ತ ಗಣಪನ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಏಕಗಾವಾಕ್ಷಿ ಅಡಿ ನಿರಾಕ್ಷೇಪಣಾ ಪತ್ರ ನೀಡುವಂತೆ ಡಿಸಿಎಂ ಪರಮೇಶ್ವರ್ ಅವರು ಬಿಬಿಎಂಪಿ, ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಕಮಿಷನರ್, ಬಿಬಿಎಂಪಿ ಆಯುಕ್ತರು ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿ ಪತ್ರ ಬರೆದಿದ್ದಾರೆ.
ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಎಲ್ಲಾ ಇಲಾಖೆಗಳಿಗೂ ಪ್ರತ್ಯೇಕವಾಗಿ ಅರ್ಜಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯಬೇಕಿತ್ತು. ಬಿಬಿಎಂಪಿಯ ಎಲ್ಲಾ ವಲಯ ಕಚೇರಿಗಳಲ್ಲಿ ಏಕಗಾವಾಕ್ಷಿ ವ್ಯವಸ್ಥೆ ಅಳವಡಿಸಲು ಡಿಸಿಎಂ ಪರಮೇಶ್ವರ್ ಸೂಚನೆ ನೀಡಿದ್ದಾರೆ. ಈ ಏಕಗಾವಾಕ್ಷಿ ವ್ಯವಸ್ಥೆ ಮಾಡಿದರೆ ಸುಲಭವಾಗಿ ನಾಲ್ಕು ಇಲಾಖೆಗಳ ನಿರಾಕ್ಷೇಪಣಾ ಪತ್ರ ಪಡೆಯಬಹುದಾಗಿದೆ.
ಪತ್ರದಲ್ಲಿ ಏನಿದೆ?
ಗಣೇಶೋತ್ಸವ ಸಂದರ್ಭದಲ್ಲಿ ಆಚರಣೆ ಮಾಡಲು ಬೆಂಗಳೂರಿನ ಸಂಘ ಸಂಸ್ಥೆಗಳು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಬೆಸ್ಕಾಂಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯಬೇಕಾಗಿರುತ್ತದೆ. ಈ ಸೌಲಭ್ಯವು ಸಂಘ ಸಂಸ್ಥೆಗಳಿಗೆ ಒಂದೇ ಕಡೆ ದೊರೆಯಲು ಅನುಕೂಲವಾಗುವಂತೆ ಆಯಾ ಇಲಾಖೆಯ ಒಬ್ಬ ನೊಡಲ್ ಅಧಿಕಾರಿಯನ್ನು ಬಿಬಿಎಂಪಿಯ ಎಲ್ಲಾ ವಲಯಗಳ ಜಂಟಿ ಆಯುಕ್ತರ ಕಚೇರಿಗೆ ನಿಯೋಜಿಸಿ, ಏಕ ಗಾವಾಕ್ಷಿಯಡಿಯಲ್ಲಿ ಸೇವೆಯನ್ನು ಒದಗಿಸುವ ವ್ಯವಸ್ಥೆಯನ್ನು ಏರ್ಪಾಡು ಮಾಡಲು ಕೂಡಲೇ ಅಗತ್ಯಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv