ಗದಗ: ಜಾತಿ ಪ್ರಮಾಣಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ನಾಲ್ಕು ಜನ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆ) ಕಾಯ್ದೆಯ ಅಡಿ ಕೇಸ್ ದಾಖಲಾಗಿರುವ ಘಟನೆ ಲಕ್ಷ್ಮೇಶ್ವರದಲ್ಲಿ ನಡೆದಿದೆ.
ತಹಶೀಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ, ಕಂದಾಯ ಅಧಿಕಾರಿ ಎಸ್.ಎಸ್ ಪಾಟೀಲ್, ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರವೀಣ್ ಭರಣಿ ಮತ್ತು ಹವಳದ ಎಂಬವರ ವಿರುದ್ಧ ಕೇಸ್ ದಾಖಲಾಗಿದೆ. ತಾಲೂಕಿನ ಬಾಲೆಹೊಸೂರ ಗ್ರಾಮದ ಗಂಟಿಚೋರ್ ಸಮುದಾಯದ ನಾಲ್ವರು ಈ ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ.
ಗಂಟಿಚೋರ್ ಸಮುದಾಯವರಿಗೆ ಎಸ್ಸಿ ಜಾತಿ ಪ್ರಮಾಣಪತ್ರ ನೀಡುವಂತೆ ಕೇಳಿದ್ದಾರೆ. ಆದರೆ ಗಂಟಿಚೊರ್ ಸಮುದಾಯ ಪರಿಶಿಷ್ಟ ಜಾತಿಗೆ ಒಳಪಡಲ್ಲ, ಪ್ರವರ್ಗ-1 ರ ವ್ಯಾಪ್ತಿಗೆ ಬರುತ್ತದೆ ಎಂಬ ವಾದ-ಪ್ರತಿವಾದಗಳು ಅನೇಕ ವರ್ಷಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಾಲೆಹೊಸೂರು ಗ್ರಾಮದ ಅನಂತಕುಮಾರ್ ಕಟ್ಟಿಮನಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ತಹಶೀಲ್ದಾರರು ಸಹ ಕೌಂಟರ್ ಕೇಸ್ ಮಾಡಿದ್ದಾರೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯಿಂದ ಪ್ರಕರಣ ದಾಖಲಾಗಿದೆ. ಕರ್ತವ್ಯ ಸ್ಥಗಿತಗೊಳಿಸಿ ಡಿಸಿ ಕಚೇರಿ ಎದುರು ಕಂದಾಯ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಪ್ರತಿಭಟನೆ ಮಾಡಿ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಎರಡು ಪ್ರಕರಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಂ.ಜಿ ಹಿರೇಮಠ ಭರವಸೆ ನೀಡಿದ್ದಾರೆ.