ಗದಗ: ಮಲಪ್ರಭಾ ಪ್ರವಾಹಕ್ಕೆ ಸಿಲುಕಿ ಅನಾರೋಗ್ಯಕ್ಕಿಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದಲ್ಲಿ ನಡೆದಿದೆ.
66 ವರ್ಷದ ಹನುಮಂತಪ್ಪ ಚಲವಾದಿ ಮೃತಪಟ್ಟಿದ್ದಾರೆ. ಮಲಪ್ರಭಾ, ಬೆಣ್ಣೆಹಳ್ಳ ಪ್ರವಾಹದ ವೇಳೆ ಮನೆಯಲ್ಲಿ ಸಿಲುಕಿಕೊಂಡಿದ್ದರು, ನಂತರ ಸಂಬಂಧಿಕರು ಹಾಗೂ ಸ್ಥಳೀಯರು ಹನುಮಂತಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ಪ್ರವಾಹದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ಯಾರೆ ಅಂತಿಲ್ಲ ಎಂಬುದು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ರೋಸಿಹೋದ ಕುಟುಂಬದವರು ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅಂತ್ಯಕ್ರಿಯೇಗಾದರು ಪ್ರವಾಹ ಪರಿಹಾರ ನೀಡಬೇಕು ಎಂಬುದು ಮೃತನ ಕುಟುಂಬದವರ ಆಗ್ರಹಿಸಿದ್ದಾರೆ.