ಗದಗ: ಭೂಕುಸಿತ ಉಂಟಾಗಿ ಗುಂಡಿಯಲ್ಲಿ ಬಿದ್ದವ್ಯಕ್ತಿ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ.
ನರಗುಂದ ಕಸಬಾ ಓಣಿಯಲ್ಲಿ ಭೂಕುಸಿತ ವೇಳೆ ರತ್ನಾಕರ ದೇಶಪಾಂಡೆ ಎಂಬವರು ಗುಂಡಿಯಲ್ಲಿ ಸಿಲುಕಿಕೊಂಡಿದ್ದರು. ತಮ್ಮ ಹಿತ್ತಲಿನಲ್ಲಿ ಹೂ ಕಿತ್ತು ತರುವ ವೇಳೆ ದಿಢೀರ್ ಭೂ ಕುಸಿತವಾಗಿದೆ. ರತ್ನಾಕರ ದೇಶಪಾಂಡೆ ಅವರು ಸುಮಾರು 10 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು. ಅವರ ನರಳಾಟ, ಕೂಗಾಟ ಚೀರಾಟ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಬಂದು ರಕ್ಷಣೆ ಮಾಡಿದ್ದಾರೆ.
ದೇಶಪಾಂಡೆ ಅವರನ್ನು ಏಣಿ ಹಾಗೂ ಹಗ್ಗದ ಮೂಲಕ ಮೇಲೆ ಎತ್ತಲಾಗಿದೆ. ನರಗುಂದ ಪಟ್ಟಣದಲ್ಲಿ ಕಳೆದ ಒಂದು ವಾರದಲ್ಲಿಯೇ ಸುಮಾರು 15 ಕಡೆಗಳಲ್ಲಿ ಭೂಕುಸಿತವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಸ್ಥಳಕ್ಕೆ ಸಿ.ಸಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ರೀತಿಯ ಸಾಕಷ್ಟು ಅವಘಡಗಳು ಸಂಭವಿಸುತ್ತಿದ್ದು, ಭೂವಿಜ್ಞಾನ ಇಲಾಖೆ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಒಂದು ವಾರದಲ್ಲಿ ಸ್ಥಳ ಪರಿಶೀಲನೆ ಮಾಡಲು ಸೂಚನೆ ನೀಡಿದ್ದೇನೆ. ಬಂದ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಜನರ ಸ್ಥಳಾಂತರ ಬಗ್ಗೆ ಚರ್ಚಿಸುವುದಾಗಿ ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ.