– ಸ್ವಚ್ಛತೆಯ ಪ್ರತಿಜ್ಞಾವಿಧಿ ಸ್ವೀಕಾರ
ಬೆಂಗಳೂರು: ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’ ಹಾಗೂ `ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು (Mahatma Gandhi) ಬೆಳಗಾವಿಯಲ್ಲಿ (Belagavi) ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಮೊದಲ ಭಾಗವಾಗಿ ಅ.2 ಗಾಂಧಿ ಜಯಂತಿಯಂದು 1 ಕಿ.ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗುವುದು. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಅವ್ರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಪ್ರದೀಪ್ ಈಶ್ವರ್
ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದಿದ್ದಾರೆ.
500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾವಿಧಿ:
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ ಎಂದರು.
ಶ್ವೇತ ವಸ್ತ್ರ ಧರಿಸಿ ನಡಿಗೆ:
ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು. ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಪ್ರತಿಜ್ಞಾ ವಿಧಿಗಾಗಿ ಆಪ್ ಮೂಲಕ ನೋಂದಣಿ:
ರಾಜ್ಯದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ಲೈನ್ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.