ಶಿವಮೊಗ್ಗ: ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ನಿಯಮಿತವಾಗಿ ಆರೋಗ್ಯ ಮೇಳಗಳನ್ನು ಆಯೋಜಿಸಬೇಕು. ಅದರಲ್ಲೂ ತಮ್ಮ ಆರೋಗ್ಯ ವಿಷಯದಲ್ಲಿ ಹಿಂಜರಿಯುವ ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಏರ್ಪಡಿಸಿಲಾಗಿತ್ತು. ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಆಪ್ತ?
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಸಚಿವರು, ಹೆಣ್ಣು ಮಕ್ಕಳು ಗರ್ಭಕೋಶದ ಸಮಸ್ಯೆ ಬಗ್ಗೆ ವೈದ್ಯರಲ್ಲಿ ತೋರಿಸಿಕೊಳ್ಳಲು ಹಿಂಜರಿಯುತ್ತಾರೆ. ಮಂಡ್ಯದಲ್ಲಿ ಆಯೋಜಿಸಿದ್ದ ಆರೋಗ್ಯ ಮೇಳ ಒಂದರಲ್ಲಿ 900 ಗರ್ಭಕೋಶದ ಸಮಸ್ಯೆಗಳು ವರದಿಯಾಗಿವೆ. ಆದ್ದರಿಂದ ಹೆಣ್ಣುಮಕ್ಕಳ ಗರ್ಭಕೋಶದ ಸಮಸ್ಯೆಗಳು ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳ ಬಗ್ಗೆ ಇಂತಹ ಮೇಳಗಳು ಮತ್ತು ವಿವಿಧ ಆರೋಗ್ಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಎಲ್ಲೆಡೆ ಕಣ್ಣಿನ ದೃಷ್ಟಿ ಸಮಸ್ಯೆ ಹೆಚ್ಚಾಗಿದ್ದು, ಹೋಬಳಿ ಮಟ್ಟದಲ್ಲಿ ಈ ಸಮಸ್ಯೆಗಳ ತಪಾಸಣೆ ನಡೆಯಬೇಕು. ನಮ್ಮ ಪ್ರಧಾನಿಯವರು ಉತ್ತಮ ಆರೋಗ್ಯಕ್ಕೆ ಪೂರಕವಾಗಿರುವ ಯೋಗಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕ್ರೀಡಾ ವಲಯದಲ್ಲಿ, ಹಳ್ಳಿ ಹಳ್ಳಿಯಲ್ಲಿ ಯೋಗಾ ಕೇಂದ್ರ ತೆರೆಯುವ ಬಗ್ಗೆ ಚಿಂತಿಸಲಾಗುತ್ತಿದೆ. ಕೋವಿಡ್ನಂತಹ ಸಂಕಷ್ಟ ಮತ್ತೊಮ್ಮೆ ಬರಬಾರದೆಂದು ನಮ್ಮ ಪ್ರಧಾನಿಯವರು ಮನೆ ಮನೆಗೆ ತೆರಳಿ ಲಸಿಕೆ ನೀಡುವಂತಹ ವ್ಯವಸ್ಥೆ ಮಾಡಿದ್ದಾರೆ. ಆರೋಗ್ಯ ಸೇವೆ ನೀಡುತ್ತಿರುವ ವೈದ್ಯರು, ಕಾರ್ಯಕರ್ತರು ರಾಜ್ಯಕ್ಕೆ ಗೌರವ ತರುವ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಪೊಲೀಸರ ಮೇಲೆ ಕೈ ಮಾಡೋದು, ಠಾಣೆಗೆ ನುಗ್ಗೋ ಪ್ರಯತ್ನ ಮಾಡೋದು ಅಕ್ಷಮ್ಯ ಅಪರಾಧ: ಬಿಎಸ್ವೈ
ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಡಿಹೆಚ್ಓ ಡಾ.ರಾಜೇಶ್ ಸುರಗಿಹಳ್ಳಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್, ಸೇರಿದಂತೆ ಇತರರು ಹಾಜರಿದ್ದರು.