ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಒಂದು ಅವಕಾಶ ಕೊಡಿ ಎಂದು ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ರೈತರ ಸಾಲಮನ್ನಾ ಮಾಡುತ್ತಾರೆ. ನ್ಯಾಯ ಯೋಜನೆಯು 25 ಕೋಟಿ ಜನರಿಗೆ ಅನುಕೂಲವಾಗಲಿದೆ. ಅವರು ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ತಿಳಿಸಿದರು.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ನಯಕರು ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು. ಇತ್ತ ಕಾಂಗ್ರೆಸ್ನಿಂದಲೂ ವಿಶೇಷ ಆಹ್ವಾನ ಬಂದಿತ್ತು. ಅಂತಿಮವಾಗಿ ನಾನು ಕಾಂಗ್ರೆಸ್ ಸೇರಿಕೊಂಡೆ ಎಂದು ಶತ್ರುಘ್ನ ಸಿನ್ಹಾ ಹೇಳಿದರು.
ಶತ್ರುಘ್ನ ಸಿನ್ಹಾ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿದ್ದರು. ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದರು. ಯಾವಾಗ ತಮಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂದು ಖಚಿತವಾಯಿತೋ ಆಗ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾದರು.
ಪಾಟ್ನಾ ಸಾಹೀಬ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶತ್ರುಘ್ನ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರು ಆಸ್ತಿಯ ವಿವರವನ್ನು ಘೋಷಣೆ ಮಾಡಿದ್ದಾರೆ. ತಮ್ಮ ಬಳಿ 112.22 ಕೋಟಿ ರೂ. ಮೌಲ್ಯದ ಚರ-ಸ್ಥಿರಾಸ್ತಿ ಇರುವುದಾಗಿ ಪ್ರಕಟಿಸಿದ್ದಾರೆ.