ನವದೆಹಲಿ: ಬೆಂಗಳೂರು (Bengaluru) ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಚರ್ಚೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ನಿತಿನ್ ಗಡ್ಕರಿ (Nitin Gadkari) ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಬಿಬಿಎಂಪಿ ಹಾಗೂ ಬಿಡಿಎ ಮೂಲಕ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಸಲ್ಲಿಕೆಗೆ ಆಗಸ್ಟ್ 8 ಕೊನೆಯ ದಿನವಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚಿಸಿದ್ದೇನೆ. ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆಗೆ ಕಾರಣವಾಗಿವೆ. ಈ ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವರ ಜೊತೆ ಚರ್ಚಿಸಿದ್ದೇನೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ
ನಮ್ಮ ವಿಚಾರಕ್ಕೆ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅವರು ತಮ್ಮ ಸಲಹೆಯನ್ನೂ ನೀಡಿದ್ದಾರೆ. ಸುರಂಗ ರಸ್ತೆ, ಫ್ಲೈ ಓವರ್ ಅಥವಾ ಇತರೆ ಮಾದರಿ ಯೋಜನೆ ಜಾರಿ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ತಿಳಿಸಿದ್ದಾರೆ ಎಂದರು.
ಸಂಚಾರ ದಟ್ಟಣೆ ನಿಯಂತ್ರಣ (Bengaluru Traffic) ಮಾಡಿ ಬೆಂಗಳೂರಿನ ಚಿತ್ರಣ ಬದಲಿಸಬೇಕಿದೆ. ದೆಹಲಿ, ಮುಂಬೈ ನಗರಗಳಲ್ಲೂ ಸಂಚಾರ ದಟ್ಟಣೆ ಹೆಚ್ಚಾಗಿದ್ದರೂ, ಬೆಂಗಳೂರನ್ನು ಜಾಗತಿಕ ನಗರ ಎಂದು ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಕೇವಲ ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಮಾತ್ರ ಹೆಚ್ಚಾಗಿ ಮಾತನಾಡುತ್ತಾರೆ. ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲು ನಾವು ಸಜ್ಜಾಗುತ್ತಿದ್ದು, ಈಗಾಗಲೇ ಚೀನಾ, ಸಿಂಗಾಪುರ, ಇಸ್ರೇಲ್ ಸೇರಿದಂತೆ ಹತ್ತಾರು ಕಂಪನಿಗಳು ಬಂದು ತಮ್ಮ ವಿಚಾರ ತಿಳಿಸಿವೆ. ಈ ಕಂಪನಿಗಳಿಗೆ ಈಗಾಗಲೇ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಕರೆಯಲಾಗಿರುವ ಟೆಂಡರ್ ನಲ್ಲಿ ಭಾಗವಹಿಸಿ, ಇಡೀ ಯೋಜನೆ ಹೇಗೆ ಜಾರಿ ಮಾಡಬಹುದು ಎಂದು ವಿವರಿಸುವಂತೆ ತಿಳಿಸಿದ್ದೇವೆ ಎಂದು ಹೇಳಿದರು.
Web Stories