ನೆಲಮಂಗಲ: ಗ್ರಾಮೀಣ ಭಾಗದ ಶಾಲೆಯ ಬಡ ಮಕ್ಕಳಿಗೆ ವಿದ್ಯಾಭ್ಯಾಸ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಂದೆ-ತಾಯಿ ಹೆಸರಲ್ಲಿ ವಿದ್ಯಾರ್ಥಿಗಳಿಗೆ ನಾಟಿ ವೈದ್ಯ ರವಿಕುಮಾರ್ ಚಿನ್ನದ ಉಂಗುರ ಕೊಟ್ಟಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಟಾಪರ್ಸ್ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಮೂರು ವಿದ್ಯಾರ್ಥಿಗಳಿಗೆ ಚಿನ್ನದ ಉಂಗುರಗಳನ್ನು ಪ್ರತಿಭಾ ಪುರಸ್ಕಾರವಾಗಿ ನೀಡಲಾಯಿತು. ಭಟ್ಟರಹಳ್ಳಿ ಗ್ರಾಮದ ನಾಟಿ ವೈದ್ಯ ಗಂಗಣ್ಣ ಅವರು ನಿರ್ಮಿಸಿ ಸರ್ಕಾರಕ್ಕೆ ಬಿಟ್ಟುಕೊಟ್ಟ ಸೋಲದೇವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿ ವರ್ಷವು ಒಬ್ಬ ವಿದ್ಯಾರ್ಥಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳ ನೇಮಕ
ಕಳೆದ ಎರಡು ವರ್ಷಗಳ ಕಾಲ ಕೋವಿಡ್ ಕಾರಣ ಕಾರ್ಯಕ್ರಮ ಮುಂದೂಡಿದ್ದು, ಈಗ ಮೂರು ಸಾಲಿನ ಒಬ್ಬೊಬ್ಬ ವಿದ್ಯಾರ್ಥಿಗೆ ಚಿನ್ನದ ಉಂಗುರ ನೀಡಿದ ರವಿಕುಮಾರ್ ತನ್ನ ತಂದೆ-ತಾಯಿಯ ಕೆಲಸವನ್ನು ಮುಂದುವರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನೆಲಮಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ಸೇರಿದಂತೆ ಶಾಲೆಯ ಉಪನ್ಯಾಸಕ ವೃಂದ ಹಾಗೂ ಗ್ರಾಮ ಪಂಚಾಯಿತಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.