ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ
ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ
ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.