ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಾವು ತೆಗೆದುಕೊಂಡಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೈತ್ರಿ ಪಕ್ಷದ ಅಭ್ಯರ್ಥಿಗಳು ನಮ್ಮವರೇ ಎಂದು ತಿಳಿದಿದ್ದೇವೆ. ಹೀಗಾಗಿ ಅವರ ಗೆಲುವಿಗೆ ನಮ್ಮ ಪಕ್ಷದ ಕಾರ್ಯಕರ್ತರು ಚಾಚೂ ತಪ್ಪದೇ ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ನಾವು ಕಾಯ-ವಾಚಾ ಕೆಲಸ ಮಾಡ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎರಡು ಪಕ್ಷದ ನಾಯಕರು ಪರಸ್ಪರ ಸಹಕಾರ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆ ವಿಚಾರವಾಗಿ ನಾಳೆ ಎರಡು ಪಕ್ಷಗಳ ಅಧ್ಯಕ್ಷರು, ಮುಖಂಡರು ಸಭೆ ನಡೆಸುತ್ತೇವೆ. ಜೆಡಿಎಸ್ ಕಚೇರಿಯಲ್ಲಿ ಇಂದು ಕೂಡ ಸಭೆ ನಡೆಸಿದ್ದು, ಸಾಕಷ್ಟು ಜನರು ಬಂದಿದ್ದಾರೆ ಎಂದರು.
ಸಭೆ ಕುಂಟ್ಕೊಂಡು ಬಂದ, ನಡ್ಕೊಂಡು ಬಂದ ಎಂದು ಏನು ಬೇಕಾದ್ರು ಹಾಕಿಕೊಳ್ಳಿ. ಆದರೆ ನಾವು ಮಾತ್ರ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಎಚ್.ಡಿ.ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಗುಡುಗಿದರು.
ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದರು. ಜೊತೆಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರು ಕೂಡ ಉಪಸ್ಥಿತರಿದ್ದರು.