ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರಿಕೆ ಕೊಡುವ ಮೂಲಕ ವೈದ್ಯಕೀಯ ನೆರವು ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರು ಈ ಬಗ್ಗೆ “ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವೆ. ಪ್ರವಾಹ ಬಂದು ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ ಕೇಳಿಕೊಳ್ಳುತ್ತೇನೆ” ಎಂದು ವೈದ್ಯರಿಗೆ ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಪ್ರವಾಹ ಪೀಡಿತ ಹಳ್ಳಿಗಳಿಗೆ ತೆರಳುವ ವೈದ್ಯರು ಹಾಗೂ ದಾದಿಯರಿಗೆ ಈ ಕುರಿತು ಅನುಕೂಲಗಳನ್ನು ಒದಗಿಸಬೇಕೆಂದು ರಾಜ್ಯ ಸರ್ಕಾರಕ್ಕೂ ಮನವಿ ಮಾಡಿಕೊಳ್ಳುತ್ತಿದ್ದೇನೆ.@CMofKarnataka
2/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 22, 2019
ಮತ್ತೊಂದು ಟ್ವೀಟ್ನಲ್ಲಿ, ಪ್ರವಾಹ ಪೀಡಿತ ಹಳ್ಳಿಗಳಿಗೆ ತೆರಳುವ ವ್ಯದ್ಯರು ಹಾಗೂ ದಾದಿಯರಿಗೆ ಈ ಕುರಿತು ಅನುಕೂಲಗಳನ್ನು ಒದಗಿಸಬೇಕೆಂದು ರಾಜ್ಯ ಸರ್ಕಾರಕ್ಕೂ ಮನವಿ ಮಾಡಿಕೊಂಡಿದ್ದಾರೆ. ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.