ಕೊಪ್ಪಳ: ಉಸ್ತುವಾರಿಗೆ ಬದಲಾವಣೆಗೆ ಸಂಬಂಧಿಸಿದಂತೆ ಜಿಲ್ಲೆ ಮಾತ್ರ ಬದಲಾಗಿದೆ. ಆದರೆ ಖಾತೆ ಬದಲಾಗಿಲ್ಲ. ಮಂತ್ರಿಗಳು ಒಂದೇ ಜಿಲ್ಲೆಗೆ ಸೀಮಿತರಾಗಿಲ್ಲ ಬದಲಾಗಿ ಇಡೀ ರಾಜ್ಯದ ಮೂವತ್ತು ಜಿಲ್ಲೆಗಳಿಗೆ ಸಂಬಂಧಿಸಿದವರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಮುಸಲಾಪೂರ ಗ್ರಾಮ ಸೇರಿದಂತೆ ನಾನಾ ಗ್ರಾಮಗಳಲ್ಲಿ ಕುಡಿವ ನೀರು, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಇತರೆ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲಿ ಒಳ್ಳೆಯ ಕೆಲಸ ಮಾಡಬೇಕು, ಸುಮ್ಮನೇ ಅನಾವಶ್ಯಕ ಚರ್ಚೆ ಮಾಡಬಾರದು. ಸಚಿವ ಆನಂದ್ ಸಿಂಗ್ ಅವರನ್ನು ಕೊಪ್ಪಳ ಉಸ್ತುವಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ. ಆದರೆ ಅವರ ಅಭಿಮಾನಿಗಳು ಅಲ್ಲೆ ಇರಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಅದು ತಪ್ಪೇನು ಅಲ್ಲ ಮತ್ತು ಹೊಸದೇನು ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಆಟೋ ಚಾಲಕನಿಂದ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯೋಜನೆ ಮಾಡಿರುವುದು ನನಗೆ ಖುಷಿ ತಂದಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಪಕ್ಷದಲ್ಲಿ ಹಿರಿಯರು, ಅವರ ಬಗ್ಗೆ ಮಾತನಾಡುವುದು ಸರಿಯಲ್ಲ. ಬಿಜೆಪಿಯಿಂದ ಕಾಂಗ್ರೆಸ್ ಪಕ್ಷವನ್ನು ಕೆಲ ಶಾಸಕರು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿರುವುದರ ಬಗ್ಗೆ ಪಕ್ಷ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ನಾನು ಮಾತನಾಡುವುದಿಲ್ಲಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಸೇನಾ ಹಿಂದುತ್ವದ ಹೆಸರಲ್ಲಿ ಚುನಾವಣೆ ಎದುರಿಸಿದ ಮೊದಲ ಪಕ್ಷ: ಸಂಜಯ್ ರಾವತ್
2023 ರವರೆಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಇರುತ್ತಾರೆ. ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಅವರ ಪಕ್ಷದ ಶಾಸಕರೇ ಸಾಲು ಸಾಲಾಗಿ ನಮ್ಮ ಪಕ್ಷಕ್ಕೆ ಬಂದಿರುವುದು ರಾಜ್ಯಕ್ಕೆ ಗೊತ್ತಿದೆ. ನಮ್ಮ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವ ಬದಲು ತಮ್ಮ ಪಕ್ಷದ ಬಗ್ಗೆ ತಿಳಿದುಕೊಳ್ಳಲಿ ಎಂದು ಟಾಂಗ್ ನೀಡಿದರು.