ಚಾಮರಾಜನಗರ/ಬೆಂಗಳೂರು: ಹನೂರಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್ಕೌಂಟರ್ (Hanur Encounter) ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾಗಿದೆ.
ಚಾಮರಾಜನಗರ (Chamarajanagar) ಜಿಲ್ಲಾಧಿಕಾರಿ ಶ್ರೀರೂಪಾ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ಚಾಮರಾಜನಗರ ಎಸಿ ದಿನೇಶ್ ಕುಮಾರ್ ಮೀನಾ ಅವರಿಂದ ಮ್ಯಾಜಿಸ್ಟ್ರೇಟ್ ತನಿಖೆ ನಡೆದಿತ್ತು. ಅರಣ್ಯ ಸಿಬ್ಬಂದಿ ಹಾಗೂ ಪ್ರತ್ಯಕ್ಷ ಸಾಕ್ಷಿ ಮಹಿಮಾ ದಾಸ್ ಹೇಳಿಕೆಗಳನ್ನು ವರದಿಯಲ್ಲಿ ದಾಖಲಿಸಲಾಗಿದೆ. ಅಲ್ಲದೆ, ಮರಣೋತ್ತರ ಪರೀಕ್ಷೆ, ಘಟನಾ ಸ್ಥಳದ ಭೇಟಿ ಬಗ್ಗೆ ಕೂಡ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಚಾಮರಾಜನಗರ ಎನ್ಕೌಂಟರ್ ಕೇಸ್ – ಸೋಮವಾರ ಸರ್ಕಾರಕ್ಕೆ ವರದಿ ಸಲ್ಲಿಕೆ ಸಾಧ್ಯತೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ, ತನಿಖೆ ನಡೆಯುತ್ತಿದೆ. ಎಸಿ ವರದಿಗೂ ತನಿಖಾ ವರದಿಗೂ ಸಂಬಂಧ ಇಲ್ಲ. ಇಲಾಖೆಯ ಆಸ್ತಿ ನಾಶ ಮಾಡಿದವರ ಮೇಲೂ ಕ್ರಮ ಜರುಗಿಸುತ್ತೇವೆ. ಅಧಿಕಾರಿಗಳು ಹೆದರುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ಅರಣ್ಯಕ್ಕೆ ಹೋಗಿ ಕೆಲಸ ಮಾಡಲಿ ಎಂದಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ (Forest Department) ನಡೆಸಿದ ಶೂಟೌಟ್ನಲ್ಲಿ ಅಂಥೋಣಿಸಾಮಿ, ಜಾನ್ ಪೀಟರ್ ಹಾಗೂ ಡೇವಿಡ್ ಕುಮಾರ್ ಹತ್ಯೆಯಾಗಿದ್ದರು. ಈ ಮೂವರೂ ಬೇಟೆಯಾಡುವ ಉದ್ದೇಶದಿಂದಲೇ ಅರಣ್ಯದೊಳಗೆ ಪ್ರವೇಶ ಮಾಡಿದ್ದರು. ಈ ಕಾರಣಕ್ಕಾಗಿಯೇ ನಾಡ ಬಂದೂಕು ತೆಗೆದುಕೊಂಡು ಹೋಗಿದ್ದರು ಎಂದು ಅರಣ್ಯಾಧಿಕಾರಿಗಳು ಆರೋಪಿಸಿದ್ದರು. ಈ ಎನ್ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇದನ್ನೂ ಓದಿ: ಹನೂರು ಎನ್ಕೌಂಟರ್ ಪ್ರಕರಣ ಸಿಐಡಿಗೆ ಹಸ್ತಾಂತರ
