– ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ
ಉಡುಪಿ: ಕರ್ನಾಟಕ ಮುಸ್ಲಿಂ ಜಮಾತ್ ಗುರುವಾರ ನಗರದಲ್ಲಿ ಆಯೋಜಿಸಿರುವ ಪೌರತ್ವ ಕಾಯ್ದೆ ವಿರುದ್ಧದ ಪ್ರಜಾ ಭಾರತ ಸಭೆಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಹಾಜಬ್ಬ ಅವರನ್ನು ಉದ್ಘಾಟಕರಾಗಿ ಆಹ್ವಾನಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.
ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಅನ್ಸಾರ್ ಈ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ. ಹರೇಕಳ ಹಾಜಬ್ಬ ಜಾತ್ಯಾತೀತವಾಗಿ ರಾಜಕೀಯವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ವ್ಯಕ್ತಿಯಾಗಿದ್ದಾರೆ. ಅವರನ್ನು ರಾಜಕೀಯ ಹೋರಾಟಗಳಿಗೆ ಬಳಸಿಕೊಳ್ಳಬಾರದು ಎಂದು ಅನ್ಸಾರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಹೀಗಾಗಿ ಕಾರ್ಯಕ್ರಮದ ಉದ್ಘಾಟನೆಗೆ ಶಿಕ್ಷಣ ಸಂತ ಹರೇಕಳ ಹಾಜಬ್ಬ ಅವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದ್ದಕ್ಕೆ ವಿವಾದ ಹುಟ್ಟಿಕೊಂಡಿದೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ
ಕಾರ್ಯಕ್ರಮದ ಬಗ್ಗೆ ಹಾಜಬ್ಬರಿಗೆ ಸ್ಪಷ್ಟ ಮಾಹಿತಿ ಇಲ್ಲ. ಪ್ರಜಾ ಭಾರತ ಕಾರ್ಯಕ್ರಮ ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆಯ ವಿರುದ್ಧ ನಡೆಯುತ್ತಿರುವ, ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸುವ ಕಾರ್ಯಕ್ರಮ ಆಗಿದೆ. ಇದರಲ್ಲಿ ಹರೇಕಳ ಹಾಜಬ್ಬ ಅವರು ಭಾಗವಹಿಸಿದರೆ ಅವರ ವಿರುದ್ಧ ಪೌರತ್ವ ಕಾಯ್ದೆ ಪರವಾಗಿರುವ ಜನರು ತಿರುಗಿ ಬೀಳುವ ಸಾಧ್ಯತೆ ಇದೆ ಎಂದು ಅನ್ಸಾರ್ ಹೇಳಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ನಡೆದಾಡುವ ಅರಣ್ಯದ ವಿಶ್ವಕೋಶ ತುಳಸಿ ಗೌಡರಿಗೆ ಪದ್ಮಶ್ರೀ ಗೌರವ
ಜಾತ್ಯಾತೀತ- ಧರ್ಮಾತೀತ ಹಾಜಬ್ಬರು ನಾಳೆಯಿಂದ ಹಿಂದೂ ಧರ್ಮದ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಈವರೆಗೆ ಯಾವುದೇ ವಿವಾದಗಳಿಗೆ ಸಿಕ್ಕಿಕೊಳ್ಳದ ಹರೇಕಳ ಹಾಜಬ್ಬರನ್ನು ಇದೀಗ ಯಾವುದೋ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಲಾಗುತ್ತದೆ. ಹರೇಕಳ ಹಾಜಬ್ಬ ಅವರು ಶಿಕ್ಷಣರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಇದೀಗ ಅವರ ಮೂಲಕವೇ ಸಿಎಎ ವಿರುದ್ಧ ಕಾರ್ಯಕ್ರಮ ಉದ್ಘಾಟಿಸಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕರ್ನಾಟಕ ಮುಸ್ಲಿಂ ಜಮಾತ್ ಮುಂದಾಗಿದೆ ಎಂದು ಅನ್ಸಾರ್ ಆರೋಪಿಸಿದ್ದಾರೆ. ಅಲ್ಲದೆ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ.