ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇಂದು (ಗುರುವಾರ) ವಿದ್ಯುಕ್ತ ಚಾಲನೆ ದೊರೆಯಿತು. ಜಯಘೋಷದ ನಡುವೆ ಹಾಸನಾಂಬ ದೇವಿಯು ವಿಶ್ವರೂಪ ದರ್ಶನ ಕರುಣಿಸಿದರು.
ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಎರಡು ಡೋಸ್ ಪಡೆದ ಭಕ್ತರಿಗೆ ಮಾತ್ರ ಷರತ್ತುಬದ್ಧ ಅನುಮತಿ ನೀಡಿರುವ ಜಿಲ್ಲಾಡಳಿತ ಹಾಸನಾಂಬ ದೇವಿ ದರ್ಶನಕ್ಕೆ ಇಂದಿನಿಂದ ಅವಕಾಶ ಕಲ್ಪಿಸಿದೆ. ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಮಧ್ಯಾಹ್ನ 12:16ಕ್ಕೆ ದೇಗುಲದ ಬಾಗಿಲು ತೆರೆಯಲಾಯಿತು.
ಅಕ್ಟೋಬರ್ 26 ರಿಂದ ನ.6 ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ ಬಾರಿ 9 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಲಂಗು ಲಗಾಮು ಇಲ್ಲದೆ ಮಾತನಾಡಿ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮೆ: ರಂಭಾಪುರಿ ಶ್ರೀ
ಇಂದು ಮಧ್ಯಾಹ್ನ 12:16ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತಸಾಗರ ಹರಿದು ಬರಲಿದೆ.
ಅರ್ಚಕರು ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಪ್ರೀತಂ ಗೌಡ , ಜಿಲ್ಲಾಧಿಕಾರಿ ಆರ್.ಗಿರೀಶ್, ಹಾಸನಾಂಬ ದೇವಸ್ಥಾನ ಆಡಳಿತಾಧಿಕಾರಿ ಬಿ.ಎ.ಜಗದೀಶ್ ,ಎಸ್ಪಿ ಆರ್.ಶ್ರೀನಿವಾಸಗೌಡ , ಡಿವೈಎಸ್ಪಿ ಪುಟ್ಟಸ್ವಾಮಿ ಗೌಡ, ಎಎಸ್ಪಿ ನಂದಿನಿ, ಜಿಪಂ ಸಿಇಒ ಬಿ.ಎ ಪರಮೇಶ್ ಸೇರಿದಂತೆ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲದ ಗರ್ಭಗುಡಿ ಬಾಗಿಲ ಬೀಗ ಮುದ್ರೆ ತೆರೆಯಲಾಯಿತು. ಇದನ್ನೂ ಓದಿ: ‘ಪುಷ್ಪ’ ಸಾಂಗ್ ನಲ್ಲಿ ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ ರಶ್ಮಿಕಾ
ಬೆಳಿಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಪ್ರದಾಯದಂತೆ ತಳವಾರ ವಂಶದ ನರಸಿಂಹರಾಜ್ ಅರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅನುವು ಮಾಡಿಕೊಟ್ಟರು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪ ಗಳಿಂದ ಅಲಂಕರಿಸಲಾಗಿತ್ತು. ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಉಳಿದ ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕಾಗಿ 300 ಹಾಗೂ 1,000 ರೂ. ಗಳ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ.
ಜಿಲ್ಲಾಡಳಿತ ಭಕ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯದ ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ದೇವಾಲಯದ ಒಳಗೆ ಹಾಗೂ ಸುತ್ತಮುತ್ತ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ದೇವಿಯ ಸುಗಮ ದರ್ಶನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೊರೊನಾ ಕಾರಣ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡ ಪ್ರಮಾಣಪತ್ರ ಅಥವಾ ಮೆಸೇಜ್ನೊಂದಿಗೆ ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ ತೋರಿಸಬೇಕು.
ವರ್ಷಪೂರ್ತಿ ಬೆಳಗುತ್ತಂತೆ ದೀಪ?
ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟ ದೀಪ ವರ್ಷ ಪೂರ್ತಿ ಬೆಳಗುತ್ತದೆ. ಮುಂದಿನ ವರ್ಷ ಬಾಗಿಲು ತೆರೆದಾಗ ದೀಪ ಬೆಳಗುತ್ತಲೇ ಇರುತ್ತದೆ. ದೇವರಿಗೆ ಇಟ್ಟ ನೈವೇದ್ಯ ಒಂದು ವರ್ಷದ ನಂತರವೂ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇವಿಯ ಪವಾಡ ನೋಡಲು ಪ್ರತಿವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸುತ್ತಾರೆ.