ಹಾಸನ: ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದು, ಜೆಡಿಎಸ್ನ ನೂರಾರು ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲು ವೇದಿಕೆ ಸಿದ್ಧಗೊಳಿಸಿದೆ.
ನಗರದಲ್ಲಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಹೆಚ್ಕೆ.ಸುರೇಶ್ ಪದಗ್ರಹಣ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಜೆಡಿಎಸ್ ಮುಖಂಡರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಹಾಸನದ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್, ಹಾಸನ ಜಿಲ್ಲೆಯು ಬಿಜೆಪಿಯ ಭದ್ರಕೋಟೆಯಾಗುವ ಎಲ್ಲಾ ಲಕ್ಷಣ ಕೂಡಿ ಬಂದಿದ್ದು, ಅಂತಿಮ ತೆರೆ ಎಳೆಯುವುದು ಮಾತ್ರ ಬಾಕಿ ಇದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯತಂತ್ರ ರೂಪಿಸುತ್ತಿದ್ದು, ಅದಕ್ಕೆ ಬಿಜೆಪಿ ನಾಯಕರು, ಸಚಿವರು ಶಕ್ತಿ ತುಂಬುತ್ತಿದ್ದಾರೆ ಎಂದರು.