ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಿಗೆ ಹಾಸನ ನಗರಸಭೆ ನೋಟಿಸ್ ಜಾರಿ ಮಾಡಿದೆ.
ಸಚಿವರ ಪುತ್ರರಾದ ಪ್ರಜ್ವಲ್ ಮತ್ತು ಸೂರಜ್ ವಿರುದ್ಧ ನಗರಸಭೆ ನೋಟಿಸ್ ನೀಡಿದೆ. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಅತಿಕ್ರಮಿಸಿದ ಜಾಗವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವೇ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳನ್ನು ನಗರಸಭೆಗೆ ಹಾಜರು ಪಡಿಸಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಒಂದು ವೇಳೆ ನೋಟಿಸ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದರೆ ಅತಿಕ್ರಮ ಜಾಗವನ್ನು ತೆರುವುಗೊಳಿಸಲಾಗುತ್ತದೆ. ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡ ಮಾಲೀಕರಾದ ನಿಮ್ಮಿಂದಲೇ ವಸೂಲಿ ಮಾಡಲಾಗುವುದು ಎಂದು ನಗರಸಭೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv