ಹಾವೇರಿ: ನಕಲಿ ಬಿತ್ತನೆ ಬೀಜ ಸಂಗ್ರಹ ಮಾಡಿ ಇಟ್ಟಿದ್ದವರ ಮೇಲೆ ಕ್ರಮ ಕೈಗೊಳ್ಳದಂತೆ ಕೆಲವು ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಒತ್ತಡ ಹೇರುತ್ತಿದ್ದಾರೆ. ಆದರೆ ನಾನು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಒತ್ತಡಕ್ಕೆ ಮಣಿದರೆ ರೈತರ ಪರಿಸ್ಥಿತಿ ತಾಯಿಯೇ ಮಗನಿಗೆ ವಿಷ ಹಾಕಿದಂತಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕಳೆದ ವಾರ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ನಕಲಿ ಬಿತ್ತನೆ ಬೀಜ ಸಂಗ್ರಹ ಮಾಡಿದ್ದ ಅಡ್ಡೆಗಳ ಮೇಲೆ ದಾಳಿ ಮಾಡಿದ್ದರು ಎಂದು ತಿಳಿಸಿದ್ದಾರೆ.
ದಾಳಿ ವೇಳೆ ಒಂದು 1 ಲಕ್ಷದ 685 ಕ್ವಿಂಟಲ್ ನಕಲಿ ಬಿತ್ತನೆ ಬೀಜವನ್ನು ಜಪ್ತಿ ಮಾಡಲಾಗಿದೆ. ಆದರೆ ಪೊಲೀಸ್ ಇಲಾಖೆ ಈವರೆಗೂ ಒಬ್ಬ ಆರೋಪಿಯನ್ನೂ ಬಂಧನ ಮಾಡಿಲ್ಲ. ಇದು ಬೇಸರದ ಸಂಗತಿ. ನಕಲಿ ಬೀಜ ಸಂಗ್ರಹ ಮಾಡಿದ್ದವರು ಮತ್ತು ನಕಲಿ ಬೀಜ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಅಟ್ಟುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ನಕಲಿ ಬಿತ್ತನೆ ಬೀಜ ತಯಾರಿಸುತ್ತಿರುವ ಮೂಲವನ್ನು ಪತ್ತೆ ಮಾಡಿ ರೈತರಿಗೆ ಆಗುತ್ತಿರುವ ದೊಡ್ಡ ಅನ್ಯಾಯವನ್ನು ತಪ್ಪಿಸುವಂತೆ ಗೃಹ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದೇನೆ. ಅಲ್ಲದೇ ಅವಧಿ ಮೀರಿದ ರಸಗೊಬ್ಬರ ಮಾರಾಟ ಮಾಡೋದು ಕಂಡುಬಂದರೆ ಅಂಥಾ ಅಂಗಡಿಗಳ ಲೈಸನ್ಸ್ ರದ್ದು ಮಾಡುವುದಾಗಿ ತಿಳಿಸಿದರು. ಪ್ರಸಕ್ತ ವರ್ಷ ರೈತರಿಗೆ ಬೇಕಾದ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಪಾಟೀಲ್ ಹೇಳಿದರು.