ಹಾವೇರಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಸೇರಿರುವ ಹಿರೇಕೆರೂರಿನ ಕ್ಷೇತ್ರದ ಶಾಸಕ ಬಿ.ಸಿ ಪಾಟೀಲ್ ಜನರ ಒಪ್ಪಿಗೆ ಪಡೆದು ರಾಜೀನಾಮೆ ನೀಡಿದ್ದಾರೆ. ಅವರ ಈ ತೀರ್ಮಾನಕ್ಕೆ ನಾವು ಬದ್ಧ ಎಂದು ಅವರ ಧರ್ಮಪತ್ನಿ ವನಜಾ ಪಾಟೀಲ್ ಅವರು ಹೇಳಿದ್ದಾರೆ.
ಇಂದು ಅವರು ನಿವಾಸದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಿ.ಸಿ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲ್ಲ. ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರದ ಜನರ ಒಪ್ಪಿಗೆ ಪಡೆದು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.
ಹಿರೇಕೆರೂರು ಕ್ಷೇತ್ರದಲ್ಲಿ 38 ವರ್ಷದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಶಾಸಕರು ಗೆಲುವು ಪಡೆದಿಲ್ಲ. ಆದರೆ ಬಿ.ಸಿ.ಪಾಟೀಲ್ ಗೆದ್ದಿದ್ದಾರೆ. ಅವರು ಯಾವುದೇ ಆಮಿಷಕ್ಕೆ ಒಳಗಾಗಿ ರಾಜೀನಾಮೆ ನೀಡಿಲ್ಲ. ಹಾಗಿದ್ದರೆ ಚುನಾವಣೆಯ ಸಮಯದಲ್ಲಿ ಮನೆ ಸೈಟ್ ಮಾರಾಟ ಮಾಡುತ್ತಿರಲಿಲ್ಲ. ಅವರ ಈ ನಡೆಗೆ ನಾವು ಬದ್ಧರಾಗಿದ್ದೇವೆ ಎಂದು ಪತಿಯ ತೀರ್ಮಾನವನ್ನು ಸಮರ್ಥಿಸಿಕೊಂಡರು.
ದಕ್ಷಿಣ ಕರ್ನಾಟಕ ಅಭಿವೃದ್ಧಿಯಾಗಿದೆ. ಅದರೆ ನಮ್ಮ ಕ್ಷೇತ್ರದ ಅಭಿವೃದ್ಧಿ ಆಗಿಲ್ಲ. ಅದ್ದರಿಂದ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸಿ ಹೋಗಿದ್ದಾರೆ. ಜನರಿಗೆ ತಿಳಿಸಿಯೇ ಕ್ಷೇತ್ರಕ್ಕೆ ವಾಪಸ್ ಬರುತ್ತಾರೆ. ರಾಜೀನಾಮೆ ವಾಪಸ್ ಪಡೆಯುವ ಸಾಧ್ಯತೆ ಕಡಿಮೆ ಎಂದು ಈ ವೇಳೆ ತಿಳಿಸಿದರು.