ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್ ನಡೆಸಲಾಗಿತ್ತು. ಈ ಕಾರ್ಯಾಚರಣೆ ವೇಳೆ ಉಗ್ರರ ದಾಳಿಗೆ ಯೋಧ ಶಿವಲಿಂಗೇಶ್ವರ ಪಾಟೀಲ(26) ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಯೋಧ ದೆಹಲಿಯ ಆರ್.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ತಮ್ಮ ಕೊನೆಯುಸಿರು ಎಳೆದಿದ್ದಾರೆ.
2012ರಲ್ಲಿ ಭಾರತೀಯ ಸೇನೆಗೆ ಶಿವಲಿಂಗೇಶ್ವರ ಪಾಟೀಲ ಅವರು ಸೇರಿದ್ದರು. 6 ವರ್ಷದಿಂದ ಭಾರತೀಯ ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸಿ ಇಂದು ದೇಶಕ್ಕಾಗಿ ಜೀವವನ್ನು ಬಿಟ್ಟು ವೀರ ಯೋಧ ಎನಿಸಿಕೊಂಡಿದ್ದಾರೆ. ಯೋಧ ಹುತಾತ್ಮರಾದ ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸೋಮವಾರದಂದು ಹುತಾತ್ಮ ಯೋಧರ ಪಾರ್ಥೀವ ಶರೀರ ಅವರ ಸ್ವಗ್ರಾಮ ಗುಂಡೇನಹಳ್ಳಿ ಆಗಮಿಸಲಿದ್ದು, ಸಕಲ ಸರಕಾರಿ ಗೌರವ ಹಾಗೂ ಸೇನಾ ಗೌರವಗಳೊಂದಿಗೆ ಶಿವಲಿಂಗೇಶ್ವರ ಅವರ ಅಂತ್ಯಕ್ರಿಯೆ ನಡೆಯಲಿದೆ.