ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದು ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಎಂದು ಬಿಇಓ ಆದೇಶ ಹೊರಡಿಸಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ್ ವರ್ಗಾವಣೆಯಾದವರು. ಇವರು ಶಾಲೆಗೆ ಸರಿಯಾಗಿ ಬರುವುದಿಲ್ಲ, ಬಂದರೂ ಮದ್ಯಪಾನ ಮಾಡಿ ಬರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯಕ್ಕೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯರ ಅಮಾನತು ಅಥವಾ ಬೇರೆ ಶಾಲೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶಾಲಾ ಕೊಠಡಿಗೆ ಬೀಗ ಹಾಕಿ ಶುಕ್ರವಾರ ರಾತ್ರಿವರೆಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.
ಗ್ರಾಮಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿಸಿಪಿಐ ಅವರ ಸೂಚನೆ ಮೇರೆಗೆ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಹಾನಗಲ್ ತಾಲೂಕಿನ ಹೋತನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜಿಸಿ ಬಿಇಓ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು